ಮಧುಗಿರಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದೂರತರಂಗ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು ಎಂದು ಪಾವಗಡ ರಾಮಕೃಷ್ಣ ಆಶ್ರಮದ ಜಪಾನಂದ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಆವರಣದಲ್ಲಿ ಶನಿವಾರ ದೂರ ತರಂಗ ಶಿಕ್ಷಣ ಕೇಂದ್ರ ಸ್ಥಾಪನೆ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ರಾಮಕೃಷ್ಣ ಸೇವಾಶ್ರಮ ಮತ್ತು ಇನ್ಫೊಸಿಸ್ ಫೌಂಡೇಶನ್ನಿಂದ ಕೊರಟಗೆರೆ, ಮಧುಗಿರಿ, ಪಾವಗಡ ಹಾಗೂ ಶಿರಾ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ದೂರ ತರಂಗ ಶಿಕ್ಷಣ ಕೇಂದ್ರ ಸ್ಥಾಪಿಸಲು ಚಿಂತನೆ ನಡೆದಿದೆ ಎಂದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ 1958ರಲ್ಲಿ ಇನ್ಫೊಸಿಸ್ ಫೌಂಡೇಶನ್ ಸಂಸ್ಥಾಪಕ ನಾರಾಯಣಮೂರ್ತಿ ಅವರು ವಿದ್ಯಾಭ್ಯಾಸ ಮಾಡಿದ್ದರು. ಇದೇ ಶಾಲೆಯಲ್ಲಿ ಜನವರಿ 9ರಂದು ಬೆಳಿಗ್ಗೆ 11 ಗಂಟೆಗೆ ದೂರತರಂಗ ಶಿಕ್ಷಣ ಕೇಂದ್ರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಮಧುಗಿರಿ ಶೈಕ್ಷಣಿಕ ಜಿಲ್ಲೆ ತೀವ್ರ ಹಿಂದುಳಿದ ಪ್ರದೇಶವಾಗಿದ್ದು, ಈ ಭಾಗದ ಮಕ್ಕಳಿಗೆ ದೂರ ತರಂಗ ಶಿಕ್ಷಣ ವರದಾನವಾಗಲಿದೆ ಎಂದರು.
ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷರಾದ ಸುಧಾ ಮೂರ್ತಿ ಅವರ ಸಹಕಾರದಿಂದ ಈ ಯೋಜನೆ ಪ್ರಾರಂಭವಾಗುತ್ತಿದೆ ಎಂದರು.
ಸಭೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಹನುಮಂತರಾಯಪ್ಪ, ಇಸಿಒ ಪ್ರಾಣೇಶ್, ರಕ್ತದಾನಿ ಶಿಕ್ಷಕರ ಸ್ನೇಹ ಬಳಗದ ಅಧ್ಯಕ್ಷ ಶಶಿಕುಮಾರ್, ಶಿಕ್ಷಕರಾದ ನಿರಂಜನ, ಗೋವಿಂದರಾಜು ಇದ್ದರು.