ಬೆಂಬಲ ಬೆಲೆ ಹೆಚ್ಚಳಕ್ಕೆ ರೈತರ ಆಗ್ರಹ

ಗುಬ್ಬಿ: ಬೆಲೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳಿಗೆ ತಕ್ಷಣ ಖಾತೆ ಮಾಡಿಕೊಟ್ಟು ಪಹಣಿ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚನ್ನಬಸವೇಶ್ವರ ದೇವಾಲಯ ದಿಂದ ಮೆರವಣಿಗೆಯಲ್ಲಿ ಹೊರಟ ರೈತರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಬಿ. ಆರತಿ ಅವರಿಗೆ ಮನವಿ ಪತ್ರ |ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಅಡಿಕೆ ಮತ್ತು ತೆಂಗನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ. ಅದರಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಈ ವರ್ಷ ಸುರಿದ ಬಾರಿ ಮಳೆಯಿಂದ ಅಡಿಕೆ ಇಳುವರಿ ಕಡಿಮೆಯಾಗಿದೆ. ಜೊತೆಗೆ ಬೆಲೆ ಕುಸಿಯುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಸರ್ಕಾರ ತಕ್ಷಣ ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ
ನೀಡಿದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ಬೆಲೆ ಕುಸಿತದಿಂದ ರೈತರು ಈಗಾಗಲೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಸರ್ಕಾರ ವಿದೇಶಗಳಿಂದ ಅಡಿಕೆಯನ್ನು ಸುಂಕವಿಲ್ಲದೆ ಆಮದು ಮಾಡಿಕೊಳ್ಳುತ್ತಿದೆ. ಜೊತೆಗೆ, ಕಳ್ಳ ಸಾಗಾಣಿಕೆ ಮೂಲಕ ದೇಶದೊಳಗೆ ಅಡಿಕೆ ತರುತ್ತಿರುವುದು ಬೆಲೆ ಕುಸಿತಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಕಾರ್ಯದರ್ಶಿ ಲೋಕೇಶ್ ಮಾತನಾಡಿ, ದೇಶದ ಒಟ್ಟಾರೆ ತೆಂಗು ಉತ್ಪಾದನೆಯ ಶೇ 50ರಷ್ಟನ್ನು ತುಮಕೂರು ಜಿಲ್ಲೆಯಲ್ಲಿಯೇ ಬೆಳೆಯಲಾಗುತ್ತಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ. ವಿದ್ಯುತ್ ಖಾಸಗೀಕರಣವನ್ನು ಕೈಬಿಟ್ಟು ರೈತ ಪರವಾದ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಬಸವರಾಜು, ಕಾರ್ಯಾಧ್ಯಕ್ಷ ನರಸಿಂಹಮೂರ್ತಿ, ಕಾರ್ಯದರ್ಶಿ ಜಗದೀಶ್, ಪ್ರಾಂತ ರೈತ ಸಂಘದ ಅಜ್ಜಪ್ಪ, ಹೋಬಳಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.