ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕು, ಕೃಷಿ ಉತ್ಪನ್ನಗಳ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ (ಎಐಕೆಎಸ್ಸಿಸಿ), ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಗರದ ಎರಡು ಕಡೆ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದರು.
ಎಐಕೆಎಸ್ಸಿಸಿ ದೇಶದಾದ್ಯಂತ ರಸ್ತೆ ತಡೆಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಗರದ ಗುಬ್ಬಿ ಗೇಟ್ ವರ್ತುಲ ರಸ್ತೆಯಲ್ಲಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಭೂಸುಧಾರಣೆ ತಿದ್ದುಪಡಿ ಕಾಯ್ದೆಯ ಪ್ರತಿಯನ್ನು ಪ್ರತಿಭಟನಕಾರರು ಸುಟ್ಟರು.
ಎಐಕೆಎಸ್ಸಿಸಿ ಸಂಚಾಲಕ ಸಿ.ಯತಿರಾಜು ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಹೆಸರು ಹೇಳಿ ಕಾರ್ಪೊರೇಟ್ ಪರ ಆಡಳಿತ ನಡೆಸುತ್ತಿದೆ. ಕೋವಿಡ್ ಸೋಂಕಿನ ಸಂದರ್ಭದಲ್ಲಿ ಜನರ ಆತಂಕ ಲೆಕ್ಕಿಸದೆ ಕೃಷಿ, ಎಪಿಎಂಸಿ, ವಿದ್ಯುತ್ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ರೈತರು ಮತ್ತು ಗ್ರಾಹಕರಿಗೆ ರಕ್ಷಣೆ ಇಲ್ಲದಂತೆ ಮಾಡಿದೆ’ ಎಂದು ದೂರಿದರು.
ರೈತ ಸಂಘ (ಪುಟ್ಟಣ್ಣಯ್ಯ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು, ಪ್ರಾಂತ ರೈತ ಸಂಘದ ಸಂಚಾಲಕ ಅಜ್ಜಪ್ಪ, ರೈತ ಕೃಷಿ ಕಾರ್ಮಿಕ ಸಂಘಟನೆ ಮುಖಂಡ ಎಸ್.ಎನ್.ಸ್ವಾಮಿ, ಎಐಕೆಎಸ್ನ ಕಂಬೇಗೌಡ, ಎಐಕೆಎಸ್ಸಿಸಿನ ಕಾರ್ಯದರ್ಶಿ ಬಿ.ಉಮೇಶ್, ರಾಜ್ಯ ರೈತ ಸಂಘದ ಕಾರ್ಯದರ್ಶಿ ಪಾಲ್ಗೊಂಡಿದ್ದರು.