ತುಮಕೂರು: ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ಮುಖಂಡ ಸುಧೀಶ್ವರ್ (54) ಬಹು ಅಂಗಾಂಗ ವೈಫಲ್ಯದಿಂದಾಗಿ ಶುಕ್ರವಾರ ಬೆಳಿಗ್ಗೆ ಜಯಪುರದ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಇವರು ಒಮ್ಮೆ ಜೆಡಿಎಸ್ನಿಂದ ಸ್ಪರ್ಧಿಸಿ ನಗರಸಭೆಗೆ ಆಯ್ಕೆಯಾಗಿದ್ದರು. ನಂತರ ಕಾಂಗ್ರೆಸ್ನಿಂದ ಸ್ಪರ್ಧಿಸಿ ಮಹಾನಗರ ಪಾಲಿಕೆ ಸದಸ್ಯರಾಗಿದ್ದರು. 2 ಬಾರಿಯೂ 9ನೇ ವಾರ್ಡ್ನಿಂದ ಸ್ಪರ್ಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ತಮ್ಮ ವಾರ್ಡ್ಗೆ ಮಹಿಳಾ ಮೀಸಲು ಬಂದ ಕಾರಣ ತಮ್ಮ ಪತ್ನಿ ಪ್ರಭಾವತಿ ಸುಧೀಶ್ವರ್ ಅವರನ್ನು ನಿಲ್ಲಿಸಿ ಗೆಲ್ಲಿಸಿದ್ದರು.
ಸುಧೀಶ್ವರ್ ನಗರಸಭಾ ಸದಸ್ಯರಾಗಿ, ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಜಯಪುರ ಲಕ್ಷ್ಮಿದೇವಿ ಟ್ರಸ್ಟ್ನ ಅಧ್ಯಕ್ಷರಾಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಸೊಗಡು ಶಿವಣ್ಣ, ಡಾ.ರಫೀಕ್ ಅಹಮ್ಮದ್, ಮೇಯರ್ ಫರಿದಾ ಬೇಗಂ, ಉಪ ಮೇಯರ್ ಶಶಿಕಲಾ ಗಂಗಹನುಮಯ್ಯ ಮತ್ತಿತರರು ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಅಂತ್ಯಕ್ರಿಯೆ ನಗರದ ಜಯಪುರ ರುದ್ರಭೂಮಿಯಲ್ಲಿ ನಡೆಯಿತು.