ತುರುವೇಕೆರೆ: ‘ಬಿಜೆಪಿಯು ತಾಲ್ಲೂಕು ಆಡಳಿತವನ್ನು ಬಳಸಿಕೊಂಡು ಗ್ರಾಮ ಪಂಚಾಯಿತಿ ಚುನಾವಣಾ ಮೀಸಲಾತಿ ಪಟ್ಟಿಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆಸಿದ್ಧಪಡಿಸಿಕೊಂಡಿದೆ’ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ, ‘ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳ ಚುನಾ ವಣಾ ಮೀಸಲಾತಿ ಪಟ್ಟಿಯನ್ನು ಸರ್ಕಾರ ಹೊರಡಿಸಿದೆ. ಈ ಪಟ್ಟಿ ಸಂಪೂರ್ಣವಾಗಿ ಪೂರ್ವಾಗ್ರಹದಿಂದ ಕೂಡಿದೆ. ಇದರಲ್ಲಿ ಪಾರದರ್ಶಕತೆ ಇಲ್ಲ’ ಎಂದರು.
ಭೈತರಹೊಸಹಳ್ಳಿ ಪಂಚಾಯಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾನ್ಯ ವರ್ಗದ ಜನರಿದ್ದಾರೆ. ಆದರೆ ಅಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡಲಾಗಿದೆ ಹೀಗೆ ಮೀಸಲಾತಿಯಲ್ಲಿ ಲೋಪಗಳಿವೆ ಎಂದರು.
ಯಾವ ಭಾಗದಲ್ಲಿ ಜೆಡಿಎಸ್ ಪ್ರಭಾವವಿದೆಯೊ ಅಲ್ಲಿ ಸಾಮಾನ್ಯ ವರ್ಗದ ಮೀಸಲಾತಿ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಗ್ರಾಮಪಂಚಾಯಿತಿ ಚುನಾವಣಾ ಮೀಸಲಾತಿ ಪಟ್ಟಿ ಬಿಜೆಪಿ ಪರವಾಗಿರುವ ಬಗ್ಗೆ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಸೂಚನೆ ನೀಡಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲು ಸಿದ್ಧ ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಕೊಳಾಲ ಗಂಗಾಧರ್, ವಿಜಯೇಂದ್ರ, ವೆಂಕಟಾಪುರ ಯೋಗೀಶ್ ಇದ್ದರು.