ಗುಬ್ಬಿ: ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ. ದೇವೇಗೌಡ ಅವರು ಜಿಲ್ಲೆಯ ಹೊರಗಿನವರಾಗಿದ್ದರಿಂದಲೇ ಸೋತಿದ್ದಾರೆ. ಅವರ ಸೋಲಿಗೆ ನಾವ್ಯಾರು ಕಾರಣರಲ್ಲ’ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.
ಪಟ್ಟಣದ ಹೊರವಲಯದ ಹೇರೂರಿನಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಸ್ಥಳೀಯರೇ ಆಗಿದ್ದಾರೆ. ಕ್ಷೇತ್ರದ ಸಮಸ್ಯೆಗಳ ಅರಿವು ಇದೆ. ಕ್ಷೇತ್ರದ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತುವ ಸಾಮರ್ಥ್ಯ ಉಳ್ಳವರಾಗಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೊರಗಿನವರಾಗಿದ್ದು, ಕ್ಷೇತ್ರದ ಪರಿಚಯವೇ ಇಲ್ಲ. ಸಮಸ್ಯೆಗಳಿಗೆ ಸ್ಪಂದಿಸಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದರು.
ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಮಾತನಾಡಿ, ‘ಚುನಾವಣೆಗಾಗಿ ಒಬ್ಬರ ವ್ಯಕ್ತಿತ್ವವನ್ನು ತೇಜೋವಧೆ ಮಾಡಬಾರದು. ರಾಜಕೀಯ ಕೆಸರೆರಚಾಟ ಬಿಟ್ಟು ಅಭಿವೃದ್ಧಿ ಮೇಲೆ ರಾಜಕೀಯ ಮಾಡಬೇಕಿದೆ. ಸಂಸದನಾಗಿದ್ದ ಕಾಲದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದ ಮತದಾರರು ನನ್ನನ್ನು ಮತ್ತೊಮ್ಮೆ ಕೈ ಹಿಡಿಯುವರು ಎಂಬ ವಿಶ್ವಾಸವಿದೆ’ ಎಂದು ಹೇಳಿದರು .
ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಮುಖಂಡರಾದ ಬಾಲಾಜಿ ಕುಮಾರ್, ಎಚ್.ನರಸಿಂಹಯ್ಯ, ಸಲೀಂಪಾಷ ಭಾಗವಹಿಸಿದ್ದರು.