ತುಮಕೂರು: ‘ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಅನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಅಪ್ಪನ ಮನೆ ಆಸ್ತಿ ಮಾಡಿಕೊಂಡು ಜನರನ್ನು ಹೆದರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಮಧುಗಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ಶುಕ್ರವಾರ ನಡೆದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ಡಿಸಿಸಿ ಬ್ಯಾಂಕ್ನಲ್ಲಿ ರಾಜಣ್ಣ ಅವರಿಗೆ ಬೇಕಾದವರಿಗೆ ಸಾಲ ಕೊಡುತ್ತಾರೆ. ಇಷ್ಟು ದಿನ ರಾಜಣ್ಣ ನಡೆಸಿದ ದೌರ್ಜನ್ಯವನ್ನು ಈಗ ಅವರ ಮಗ ಕೂಡ ಮುಂದುವರೆಸುತ್ತಿದ್ದಾರೆ’ ಎಂದು ದೂರಿದರು.
‘ನಮ್ಮ ಕಾರ್ಯಕರ್ತರಿಗೆ ಪೊಲೀಸರನ್ನು ಬಳಸಿಕೊಂಡು ತೊಂದರೆ ನೀಡಿದರೆ, ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ’ ಎಂದು ಎಚ್ಚರಿಸಿದರು.
‘ಗ್ಯಾರಂಟಿ ಯೋಜನೆಗಳಿಂದಾಗಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ರಾಜ್ಯದಲ್ಲಿ ಬರದಿಂದಾಗಿ ₹36 ಸಾವಿರ ಕೋಟಿ ನಷ್ಟ ಉಂಟಾಗಿದೆ. ರೈತರಿಗೆ ಎಕರೆಗೆ ₹750 ಪರಿಹಾರ ನೀಡಲಾಗಿದೆ. ದನ, ಕರುಗಳಿಗೆ ಕುಡಿಯುವ ನೀರಿಲ್ಲ. ಮೇವಿನ ಸಮಸ್ಯೆ ಇದೆ. ನನ್ನ ಅವಧಿಯಲ್ಲಿ ₹5 ಸಾವಿರಕ್ಕೆ ವಿದ್ಯುತ್ ಪರಿವರ್ತಕ (ಟಿಸಿ) ಹಾಕಲಾಗುತಿತ್ತು. ಈಗ ಒಂದು ಟಿಸಿಗೆ ₹2 ಲಕ್ಷ ದಾಟಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇವೇಗೌಡರಿಗೆ ಒಕ್ಕಲಿಗರು ಶಕ್ತಿ ನೀಡಿದ್ದು, ಅದನ್ನು ಇತರೆ ಸಮುದಾಯಗಳ ಅಭಿವೃದ್ಧಿಗೆ ಧಾರೆ ಎರೆದಿದ್ದಾರೆ. ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಸಿಗಲು ದೇವೇಗೌಡರ ಶ್ರಮ ಕಾರಣ ಎಂದರು.
ಎನ್ಡಿಎ ಅಭ್ಯರ್ಥಿ ವಿ. ಸೋಮಣ್ಣ ಮಾತನಾಡಿ, ‘ಯಾವುದೇ ಆಮಿಷಗಳಿಗೆ ಬಲಿಯಾಗದೆ, ದೇಶದ ಭದ್ರತೆ ಕಾಪಾಡುವ ಪಕ್ಷಕ್ಕೆ ಮತ ನೀಡಿ’ ಎಂದು ಕೋರಿದರು.
ಮಾಜಿ ಶಾಸಕ ಎಂ.ವಿ. ವೀರಭದ್ರಯ್ಯ ಮಾತನಾಡಿ, ಸ್ವಜನ ಪಕ್ಷಪಾತ, ದ್ವೇಷದ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕಿದೆ. ಕಾಂಗ್ರೆಸ್ನಲ್ಲಿ ಪ್ರಧಾನಿ ಅಭ್ಯರ್ಥಿಗಳಿಲ್ಲ. ಅವರಿಗೆ ಮತ ಹಾಕಿದರೆ ವ್ಯರ್ಥ. ವಿ. ಸೋಮಣ್ಣ ರಾಜಕೀಯ ಅನುಭವಿ. ಅವರ ಅಭಿವೃದ್ಧಿ ಯೋಜನೆಗಳನ್ನು ಅವರ ಸ್ವ ಕ್ಷೇತ್ರಗಳಿಗೆ ತೆರಳಿ ನೋಡಬೇಕು ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ. ಅಂಜಿನಪ್ಪ, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಚಿದಾನಂದ ಗೌಡ, ಮಾಜಿ ಶಾಸಕ ಸುಧಾಕರ್ ಲಾಲ್, ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ, ಪುರಸಭೆ ಸದಸ್ಯರಾದ ತಿಮ್ಮರಾಜು, ಎಂ.ಆರ್ ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ ಬಾಬು, ಎಂ.ಎಲ್ ಗಂಗರಾಜು, ನಾರಾಯಣ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾ ವಿಜಯರಾಜ, ತಾಲ್ಲೂಕು ಅಧ್ಯಕ್ಷ ನಾಗೇಂದ್ರ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಸವರಾಜು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.