ಕುಣಿಗಲ್: ಕೇಂದ್ರ ಸರ್ಕಾರವೂ ದೇಶದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ‘ಹಿಂದಿ ದಿವಸ್’ ಆಚರಣೆ ಮಾಡುತ್ತಿದೆ ಎಂದು ಆರೋಪಿಸಿದ ತಾಲ್ಲೂಕು ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎನ್. ಜಗದೀಶ್ ನೇತೃತ್ವದಲ್ಲಿ ಪದಾಧಿಕಾರಿಗಳು ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಬಿ.ಎನ್.ಜಗದೀಶ್, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ದೇಶದಲ್ಲಿ ಪ್ರಾಧೇಶಿಕ ಭಾಷೆ ಮತ್ತು ಪಕ್ಷಗಳನ್ನು ವ್ಯವಸ್ಥಿತವಾಗಿ ನಿರ್ನಾಮ ಮಾಡುವ ಸಂಚು ನಡೆಯುತ್ತಿದೆ. ಜನರು ಎಚ್ಚೆತ್ತು ಹೋರಾಟ ನಡೆಸಲೇಬೇಕಾದ ಅನಿವಾರ್ಯವಿದೆ ಎಂದರು.
ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ಆರೂವರೆ ಕೋಟಿ ಕನ್ನಡಿಗರ ಮಾತೃಭಾಷೆಯಾಗಿದೆ. ದೇಶದ ಸಂವಿಧಾನದ ಪ್ರಕಾರ ದೇಶಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ. ಆದರೂ ಕೇಂದ್ರದಲ್ಲಿರುವ ಬಿಜೆಪಿ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ, ಪ್ರಾದೇಶಿಕ ಭಾಷೆಗಳನ್ನು ಗಣನೆಗೆ ತೆಗೆದುಕೊಳ್ಳದೆ ಹಿಂದಿ ಭಾಷೆಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಹೇರುತ್ತಿರುವುದು ಖಂಡನೀಯ ಎಂದರು.
ಪದಾಧಿಕಾರಿಗಳಾದ ಕೆ.ಎಲ್.ಹರೀಶ್, ಈ.ಮಂಜು, ತರಿಕೆರೆ ಪ್ರಕಾಶ್, ಯಡೆಯೂರು ದೀಪು, ಬೆನವಾರ ಶೇಷಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ, ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿಯ ಜಿ.ಕೆ.ನಾಗಣ್ಣ, ಮಾರುತಿ, ಮನೋಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.