ತುಮಕೂರು: ಶಿರಾ ನಗರದಲ್ಲಿ ಇಲ್ಲಿಯವರೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಆಯ್ಕೆಯಾದ ಶಾಸಕರು ಹಿಂದೂಗಳ ಹಿತರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ ಗೌಡ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿರಾ ವಿಧಾನಸಭಾ ಕ್ಷೇತ್ರದ 264 ಬೂತ್ಗಳಲ್ಲಿ ಈಗಾಗಲೇ 220 ಬೂತ್ಗಳನ್ನು ಪಕ್ಷದಿಂದ ಸಭೆಗಳನ್ನು ಮಾಡಲಾಗಿದೆ. ಶೀಘ್ರದಲ್ಲಿಯೇ ಒಂದು ಸುತ್ತಿನ ಪ್ರಚಾರ ಸಭೆಗಳು ಪೂರ್ಣವಾಗಲಿವೆ’ ಎಂದರು.
30 ವರ್ಷಗಳಿಂದ ಮದಲೂರು ಕೆರೆಗೆ ನೀರು ಹರಿದಿಲ್ಲ. ಈ ಬಾರಿ ಹೇಮಾವತಿ ನೀರು ಹರಿಸುವ ವಿಚಾರವಾಗಿ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ಹೋರಾಟದ ಬಗ್ಗೆಯೂ ಮಾಹಿತಿ ನೀಡಿದ್ದೇವೆ. ಈಗಾಗಲೇ ಮೂರು ಸಭೆಗಳನ್ನು ನಡೆಸಲಾಗಿದೆ. ಶಿರಾ ಭಾಗದಲ್ಲಿನ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿ ಟಿ.ಬಿ.ಜಯಚಂದ್ರ, ನಾನೂ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲರ ಜತೆಯೂ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಚುನಾವಣೆಯಲ್ಲಿ ಶಿರಾದಲ್ಲಿ ಕಮಲ ಅರಳಿಸುವುದೇ ನಮ್ಮ ಗುರಿ ಎಂದು ಹೇಳಿದರು.
ರೈತ ಮೋರ್ಚಾ ರಾಜ್ಯ ಮುಖಂಡರಾದ ಶಿವಪ್ರಸಾದ್ ಮಾತನಾಡಿ, ಕೃಷಿ ಮತ್ತು ಕೃಷಿ ಕ್ಷೇತ್ರದ ಸುಧಾರಣಿಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರೈತರ ಆದಾಯ ದ್ವಿಗುಣಕ್ಕೆ ಪ್ರಯತ್ನಿಸುತ್ತಿದೆ. ರೈತರಿಗೆ ಈ ಹಿಂದಿನಿಂದಲೂ ಅನ್ಯಾಯವಾಗುತ್ತಿದೆ. ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಸರ್ಕಾರ ರೈತರ ರಕ್ಷಣೆಗೆ ಮುಂದಾಗಿದೆ ಎಂದರು.
ಕಾಂಗ್ರೆಸ್ ಮತ್ತು ಕಾಂಗ್ರೆಸ್ ಬೆಂಬಲಿತ ರೈತ ಸಂಘದವರು ಈ ಮಹತ್ವದ ಮಸೂದೆಗಳನ್ನು ವಿರೋಧಿಸುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ. ಕೃಷಿ ವಲಯದಲ್ಲಿ ಕ್ರಾಂತಿಕಾರದ ಬದಲಾವಣೆಯನ್ನು ಈ ಕಾಯ್ದೆಗಳು ತರಲಿವೆ ಎಂದು ಹೇಳಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ರೈತ ಮೋರ್ಚಾ ಮುಖಂಡರಾದ ಶಿವಪ್ರಸಾದ್, ಶಿವಶಂಕರ್ ಇತರರು ಗೋಷ್ಠಿಯಲ್ಲಿ ಇದ್ದರು.