ತುಮಕೂರು: ಮಧುಗಿರಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ವಾರ್ಡನ್ ನಿವೇದಿತಾ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಹಾಸ್ಟೆಲ್ನಲ್ಲಿ ಅವ್ಯವಸ್ಥೆ, ವಾರ್ಡನ್ ನಿವೇದಿತಾ ಪತಿ ರಂಗನಾಥ್ ಹಾಸ್ಟೆಲ್ ವ್ಯವಹಾರದಲ್ಲಿ ಹಸ್ತಕ್ಷೇಪ, ಬಾಲಕಿಯರು ಇರುವ ಹಾಸ್ಟೆಲ್ಗೆ ಪ್ರತಿ ದಿನ ಪ್ರವೇಶಿಸಿ ವಿದ್ಯಾರ್ಥಿನಿಯರು, ಸಿಬ್ಬಂದಿ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಈ ವಿಷಯ ತಿಳಿದು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಹಾಸ್ಟೆಲ್ಗೆ ಭೇಟಿ ನೀಡಿದ್ದಾಗ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರು. ಈ ಅಧಿಕಾರಿಯ ವರದಿ ಆಧರಿಸಿ ಅಮಾನತ್ತು ಮಾಡಲಾಗಿದೆ.