ತುಮಕೂರು: ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಬಿಡುಗಡೆ ಮಾಡಿದ್ದ ಕೋಟ್ಯಂತರ ರೂಪಾಯಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಎಸ್.ಸಿ ಮೋರ್ಚಾ ಘಟಕದ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಆರೋಪಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯು ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದೆ. ನೇರ ಸಾಲ ಯೋಜನೆ, ಸ್ತ್ರೀಶಕ್ತಿ ಸಣ್ಣ ಗುಂಪುಗಳ ಆರ್ಥಿಕ ಅಭಿವೃದ್ಧಿ, ಐರಾವತ, ಉದ್ಯಮಶೀಲತಾ, ಗಂಗಾ ಕಲ್ಯಾಣ ಯೋಜನೆಗಳಿಗೆ ಹಣ ಒದಗಿಸಲಾಗಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.
ತಾಲ್ಲೂಕುವಾರು ಅರ್ಜಿ ಕರೆದು ಫಲಾನುಭವಿಗಳನ್ನು ಆಯ್ಕೆಮಾಡಿ ಹಣ ಮಂಜೂರು ಮಾಡಬೇಕಿತ್ತು. ಆದರೆ ಅನುದಾನದ ಹಣವನ್ನು ಜಿಲ್ಲಾ ವ್ಯವಸ್ಥಾಪಕರು ತಮ್ಮ ಕುಟುಂಬದ ಸದಸ್ಯರು, ಬಂಧುಗಳು, ಸ್ನೇಹಿತರ ಹೆಸರಿಗೆ ಹಂಚಿಕೆ ಮಾಡಿದ್ದಾರೆ. ಸಂಬಂಧಿಗಳಿಗೆ ಚೆಕ್ ನೀಡಿ ಹಣ ಡ್ರಾ ಮಾಡಿಕೊಂಡು ಸಮುದಾಯದ ಜನರನ್ನು ವಂಚಿಸಿದ್ದಾರೆ ಎಂದಿದ್ದಾರೆ. ಈ ಬಗ್ಗೆ ತುರ್ತಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.