ಮಧುಗಿರಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ವಾಟರ್ಮನ್ಗಳಿಗೆ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಹೊರ ಗುತ್ತಿಗೆ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಸುರೇಶ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಎರಡು ವಿಭಾಗಗಳಿಂದ 10 ಸಾವಿರಕ್ಕೂ ಹೆಚ್ಚು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸ್ವಚ್ಛತೆ ನಿರ್ವಹಣೆಯಲ್ಲಿ ತ್ಯಾಜ್ಯ ಸಾಗಾಣಿಕೆ ಚಾಲಕರ ಪಾತ್ರ ದೊಡ್ಡದು. ಪೌರಕಾರ್ಮಿಕರಿಗೆ ಸಮಾನವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ವಾಟರ್ ಮನ್ಗಳಿಗೂ ಯಾವುದೇ ಸೇವಾ ಭದ್ರತೆಯಿಲ್ಲದೆ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆ ಆಧಾರಿತ ನೌಕರರನ್ನು ನೇರ ವೇತನಕ್ಕೆ ಒಳಪಡಿಸಬೇಕು ಹಾಗೂ ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.