ಕುಣಿಗಲ್: ಸರ್ಕಾರದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಶೇ 21ರಷ್ಟು ರಾಗಿಯನ್ನು ತುಮಕೂರು ಜಿಲ್ಲೆಯ ರೈತರೇ ನೀಡುತ್ತಿದ್ದು, ಕುಣಿಗಲ್ ತಾಲ್ಲೂಕು ಅತಿಹೆಚ್ಚಿನ ರಾಗಿ ನೀಡುವಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಬುಧವಾರ ರಾಗಿ ಖರೀದಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಪ್ರಾರಂಭಿಸಿದ್ದು ಕಾಂಗ್ರೆಸ್ ಸರ್ಕಾರವಾಗಿದೆ. ಬಿಜೆಪಿ ಎಲ್ಲಾ ವರ್ಗದ ರೈತರ ರಾಗಿ ಖರೀದಿ ಮಾಡದೆ ತಾರತಮ್ಯ ಮಾಡುತ್ತಿದೆ. ಕೇಂದ್ರ ಪ್ರಾರಂಭದ ದಿನಗಳಲ್ಲಿ ಬಹುತೇಕ ಅವ್ಯವಸ್ಥೆ ಕೂಡಿದ್ದು, ಅಧಿಕಾರಿಗಳು ಗ್ರೈನ್ ವೋಚರ್ ನೀಡದೆ ರೈತರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ. ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಿ ಜೈಲು ಪಾಲಾದರೂ ರೈತರಿಗೆ ಹಣ ಬರಲಿಲ್ಲ ಎಂದು ದೂರಿದರು.
ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಪಾರದರ್ಶಕ ನೀತಿ ಅಳವಡಿಸಿಕೊಳ್ಳಬೇಕು. ಗೊಂದಲ ಸೃಷ್ಟಿಸದೆ ರಾಗಿ ಖರೀದಿಸಬೇಕು ಎಂದು ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಸರ್ಕಾರವೇ ಚೀಲಗಳನ್ನು ನೀಡಲಿದೆ. ರೈತರು ಚೀಲ ನೀಡುವ ಅಗತ್ಯವಿಲ್ಲ ಎಂದು ತಿಳಿಸಿದ ಶಾಸಕರು, ರಾಗಿ ತರುವ ಗ್ರಾಮಾಂತರ ಪ್ರದೇಶದ ರೈತರಿಗೆ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಆಹಾರ ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೆಸ್ವಾಮಿ, ಜಿಲ್ಲೆಯಲ್ಲಿ 11 ರಾಗಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ. ತಾಲ್ಲೂಕಿನಲ್ಲಿ ಎರಡು ಕೇಂದ್ರಗಳನ್ನು ಪ್ರಸಕ್ತ ಸಾಲಿನಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 82,602 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ತಾಲ್ಲೂಕಿನಲ್ಲಿ 14 ಸಾವಿರ ರೈತರು ಹೆಸರು ನೋಂದಾಯಿಸಿದ್ದಾರೆ. ಕೆಲವು ತಾಂತ್ರಿಕ ತೊಂದರೆಗಳಿಂದಾ ರಾಗಿ ಖರೀದಿ ಪ್ರಕ್ರಿಯೆ ತಡವಾಗಲಿದೆ. ಎರಡು ದಿನಗಳ ನಂತರ ನಿರಂತರವಾಗಿ ಖರೀದಿ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನೂರ್ ಅಜಂ, ಎಪಿಎಂಸಿ ಕಾರ್ಯದರ್ಶಿ ವೆಂಕಟೇಶ್, ಉಗ್ರಾಣ ನಿಗಮದ ವ್ಯವಸ್ಥಾಪಕ ನಾಗೇಂದ್ರ ಹಾಜರಿದ್ದರು.