ತುಮಕೂರು: ನಗರದ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನವಜಾತ ಶಿಶು ಆರೈಕೆ ಘಟಕ (ಎನ್ಐಸಿಯು), ಮಕ್ಕಳ ತೀವ್ರ ನಿಗಾ ಘಟಕ (ಪಿಐಸಿಯು), ಹೆರಿಗೆ ಕೊಠಡಿ, ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮವು ಮೇ 6ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಸಾಹೇ ವಿ.ವಿ ಕುಲಾಧಿಪತಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಕನ್ನಿಕಾ ಪರಮೇಶ್ವರ, ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಎಂ.ಝೆಡ್.ಕುರಿಯನ್ ಇತರರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಿ.ಸಾಣಿಕೊಪ್ಪ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆಸ್ಪತ್ರೆಯಲ್ಲಿ ಆಧುನಿಕ ಉಪಕರಣ ಅಳವಡಿಸಿಕೊಳ್ಳಲಾಗಿದೆ. ಚಿಕಿತ್ಸಾ ವಿಧಾನ ಮೇಲ್ದರ್ಜೆಗೇರಿಸಿ ಬಡವರಿಗೂ ಲಭ್ಯವಾಗುವ ದರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ಘಟಕಗಳು ಹಲವರಿಗೆ ನೆರವಾಗಲಿವೆ ಎಂದು ತಿಳಿಸಿದರು.
ವೈದ್ಯಕೀಯ ಮೇಲ್ವಿಚಾರಕ ಡಾ.ಎನ್.ಎಸ್.ವೆಂಕಟೇಶ್, ‘ಸಿದ್ಧಾರ್ಥ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.