ತುಮಕೂರು: ಕೋವಿಡ್ ಲಾಕ್ಡೌನ್ನಿಂದ ಅಸಂಘಟಿತ ವಲಯದ ಕಾರ್ಮಿಕರು ಸಂಕಷ್ಟ ಪರಿಸ್ಥಿತಿಯಲ್ಲಿದ್ದು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಪ್ಯಾಕೇಜ್ ವಂಚನೆಯಾಗದಂತೆ ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ, ಕಾರ್ಮಿಕ ಮುಖಂಡರು, ಅಸಂಘಟಿತ ಕಾರ್ಮಿಕ ಮುಖಂಡರ ಜತೆ ಜೂಮ್ ಸಭೆ ನಡೆಸಿದರು.
‘ಉದ್ಯೋಗ ಪ್ರಮಾಣ ಪತ್ರ ನೀಡುವಲ್ಲಿ ಇಲಾಖೆಗಳು ಸಹಕರಿಸುತ್ತಿಲ್ಲ. ಈ ಗೊಂದಲ ಪರಿಹಾರ ಮಾಡಬೇಕು’ ಎಂಬ ಕಾರ್ಮಿಕ ಮುಖಂಡರ ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ‘ಹಿಂದೆ ಕೋವಿಡ್ ಪರಿಹಾರ ಪಡೆಯುವಾಗ ಸಂಬಂಧಿಸಿದ ಇಲಾಖೆಗಳು ನೀಡಿದ್ದ ಉದ್ಯೋಗ ಪ್ರಮಾಣ ಪತ್ರವನ್ನು ಈ ಬಾರಿಯೂ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಫಲಾನುಭವಿಗಳು, ಕಾರ್ಮಿಕ ಮುಖಂಡರು ಸಹಾಯ ಕೋರಿ ಬಂದಾಗ ಕೂಡಲೇ ಸ್ಪಂದಿಸಬೇಕು’ ಎಂದು ಹೇಳಿದರು.
ಕಾರ್ಮಿಕರಿಗೆ ನಾಗರಿಕ ಸೇವಾ ಕೇಂದ್ರಗಳಲ್ಲಿ ಪ್ರಮಾಣ ಪತ್ರಗಳನ್ನು ನೀಡುವಾಗ ನಿಗದಿತ ಸೇವಾ ಶುಲ್ಕ ಮಾತ್ರ ಪಡೆಯಬೇಕು. ದುಪ್ಪಟ್ಟು ಹಣ ಪಡೆಯುವವರ ವಿರುದ್ಧ ಕಟ್ಟುನಿಟ್ಟು ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶುಭಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬಿರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಇದ್ದರು.