ತುಮಕೂರು: ಕೊರೊನಾ ಸೋಂಕು ತಡೆ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ಹುಣಸೆಹಣ್ಣು ಮತ್ತು ಕೊಬ್ಬರಿ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಕೊರೊನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ನೆರೆ ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಹೊರರಾಜ್ಯಗಳಿಗೆ ಕೊಬ್ಬರಿ ಮತ್ತು ಹುಣಸೆಹಣ್ಣನ್ನು ವ್ಯಾಪಾರ ಮಾಡಲು ಅವಕಾಶ ನೀಡಬಾರದು. ನಮ್ಮ ರಾಜ್ಯದೊಳಗೆ ವ್ಯಾಪಾರ ಮಾಡಿಕೊಳ್ಳಲಿ ಎಂದು ತಿಳಿಸಿದರು.
ಪಾವಗಡ, ಶಿರಾ ತಾಲ್ಲೂಕಿನಲ್ಲಿ ಹಾಲಿಗೆ ಬೇಡಿಕೆ ಬಂದಿದೆ. ಸರ್ಕಾರದಿಂದ ಕೊಳೆಗೇರಿಗಳ ನಿವಾಸಿಗಳು, ಬಡವರಿಗೆ ನೀಡುತ್ತಿರುವ ಹಾಲನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ನಿರ್ದೇಶನ ನೀಡಿದರು.
ಕುಣಿಗಲ್ ಮತ್ತು ತುರುವೇಕೆರೆ ಸೇರಿದಂತೆ ಕೆಲ ಭಾಗಗಳಲ್ಲಿ ಮೀನಿನ ಉತ್ಪಾದನೆ ಇದೆ. ಈ ಭಾಗದಿಂದ ಜಿಲ್ಲೆಯ ಇತರೆ ಭಾಗಕ್ಕೆ ಸಾಗಾಟ ಮಾಡಲು ಅಡ್ಡಿಪಡಿಸುವುದು ಬೇಡ. ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.
ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ವಿದ್ಯುತ್ ಪರಿವರ್ತಕಗಳು ಕೆಟ್ಟಿರುವ ಕಡೆ ಹೊಸ ಪರಿವರ್ತಕಗಳನ್ನು ಅಳವಡಿಸಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಆದೇಶಿಸಿದರು.
ಸೋಂಕು ನಿಯಂತ್ರಣ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ನಿಯಂತ್ರಣ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಸಚಿವರಿಗೆ ವಿವರಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಪಂಚಾಯತಿ ಸಿಇಒ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ, ಡಿಎಚ್ಒ ಡಾ.ಚಂದ್ರಿಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.