ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಅ.3ರಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಪ್ರಯುಕ್ತ ಪಕ್ಷದ ಸಮಾವೇಶ ನಡೆಸುತ್ತಿದ್ದು, ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ತಿಳಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಎಲ್ಲ ಘಟಕಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಪಕ್ಷದ ಎಲ್ಲ ಘಟಕಗಳನ್ನು ಪುನರ್ ರಚಿಸುವಂತೆ ವರಿಷ್ಠರು ಸೂಚಿಸಿದ್ದಾರೆ. ಪಕ್ಷವನ್ನು ಸಂಘಟಿಸುವುದಕ್ಕಾಗಿಯೇ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು ಅ.3ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದರು.
ಸಮಾವೇಶ ಪಕ್ಷದ ಜಿಲ್ಲಾ ಘಟಕದ ಕಚೇರಿ ಆವರಣದಲ್ಲಿಯೇ ನಡೆಯಲಿದ್ದು, ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಸಹಕಾರ ನೀಡಬೇಕು. ಘಟಕಗಳ ಪುನರ್ ರಚನೆ ವೇಳೆ ಪಕ್ಷ ಸಂಘಟನೆ ಮಾಡುವವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು ಮಾತನಾಡಿ, ಪ್ರತಿ ತಾಲ್ಲೂಕುಗಳಿಂದಲೂ ಕಾರ್ಯಕ್ರಮಕ್ಕೆ ಕಾರ್ಯಕರ್ತರನ್ನು ಕರೆತರಬೇಕು. ಎಲ್ಲ ಮುಖಂಡರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ನೋವನ್ನು ಮರೆಸುವಂತೆ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ಕರೆ ನೀಡಿದರು.
ಪೂರ್ವಭಾವಿ ಸಭೆಯಲ್ಲಿ ವಿದ್ಯಾರ್ಥಿ ಘಟಕ, ಕಾರ್ಮಿಕ ಘಟಕ, ಎಸ್ಸಿ, ಎಸ್ಟಿ ಘಟಕ, ಮಹಿಳಾ ಘಟಕ ಸೇರಿದಂತೆ ಎಲ್ಲ ತಾಲ್ಲೂಕುಗಳ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ, ಬೆಳ್ಳಿ ಲೋಕೇಶ್, ಹಾಲನೂರು ಅನಂತ್ ಕುಮಾರ್. ದೇವರಾಜ್, ರಂಗಣ್ಣ, ಸೋಲಾರ್ ಕೃಷ್ಣಮೂರ್ತಿ, ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷಮ್ಮ ವೀರಣ್ಣಗೌಡ, ಕುಸುಮಾ ಜಗನ್ನಾಥ್, ಮಹಿಳಾ ನಗರ ಘಟಕದ ಅಧ್ಯಕ್ಷೆ ಲೀಲಾವತಿ, ಸಾಯಿರಾಭಾನು, ಚಂಪಕಮಾಲ, ಪಾರ್ವತಮ್ಮ ಇದ್ದರು.