ತುಮಕೂರು: ಶಾಸಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಒಕ್ಕಲಿಗ ಸಮುದಾಯದ ವಿವಿಧ ಸಂಘ ಸಂಸ್ಥೆಗಳು ಬೆಂಗಳೂರಿನಲ್ಲಿ ನಡೆಸಿದ ರ್ಯಾಲಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೌರವಯುತವಾಗಿ ಕರೆದಿದ್ದರೆ ಹೋಗುತ್ತಿದ್ದರು ಎಂದು ಶಿರಾ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಅವರದ್ದೇ ಆದ ಗೌರವ ಇದೆ ಎಂದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ತಮ್ಮ ಫೋನ್ ಕರೆಗಳ ಕದ್ದಾಲಿಕೆ ಆಗಿತ್ತು ಎಂದು ಗುಬ್ಬಿಯ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಆದರೆ ಅವರು ಯಾವ ಕಾರಣಕ್ಕೆ ತಮ್ಮ ಕರೆ ಕದ್ದಾಲಿಕೆ ಆಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಫೋನ್ ಕರೆಗಳ ಕದ್ದಾಲಿಕೆ ಪ್ರಕರಣಗಳು ನಡೆದಿವೆ. ಅಲ್ಲಿ ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ. ಇಲ್ಲಿ ಮಾತ್ರ ಈ ವಿಚಾರವಾಗಿ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
‘ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಆ ಬಗ್ಗೆ ಎಂದೂ ಚಿಂತಿಸಿಲ್ಲ’ ಎಂದರು.