ಪಾವಗಡ: ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಕೂಟದ ನೇತೃತ್ವದಲ್ಲಿ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ನೌಕರರು, ಸಾರಿಗೆ ನೌಕರರ ಕುಟುಂಬ ಸದಸ್ಯರು ತಟ್ಟೆ, ಲೋಟ ಬಡಿಯುವ ಮುಖಾಂತರ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟಿಸಿದರು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು. 6ನೇ ವೇತನ ಆಯೋಗವನ್ನು ಜಾರಿಗೊಳಿಸಬೇಕು. ಸರ್ಕಾರ ಮಧ್ಯ ಪ್ರವೇಶಿಸಿ ಕೆಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಆದರೆ ಈವರೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.
ಹಳೆಯ ಸುತ್ತೋಲೆ ಬದಲಿಸಿ ಬೇಡಿಕೆ ಈಡೇರಿಸಲಾಗಿದೆ ಎಂದು ಬಿಂಬಿಸಲಾಗುತ್ತಿದೆ. 8 ಬೇಡಿಕೆ ಈಡೇರಿಸಿರುವುದಾಗಿ ಸರ್ಕಾರ ತಿಳಿಸಿದೆ. ಆದರೆ, ಈ 8 ಬೇಡಿಕೆಗಳ ಈಡೇರಿಕೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಇದರಿಂದ ನೌಕರರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ದೂರಿದರು.
ಹಗಲಿರುಳು ಶ್ರಮಿಸುವ ಸಾರಿಗೆ ನೌಕರರ ಕುಟುಂಬ ಕಡಿಮೆ ವೇತನದಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಸರ್ಕಾರ ಕೂಡಲೆ ನೌಕರರ ಬೇಡಿಕೆ ಈಡೇರಿಸಿ ನೌಕರರ ಕುಟುಂಬಗಳಿಗೆ ಆಸರೆಯಾಗಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ಕೆ.ಆರ್. ನಾಗರಾಜು ಅವರಿಗೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ರೈತ ಮುಖಂಡ ನಾಗಭೂಷಣ ರೆಡ್ಡಿ, ಆಟೊಚಾಲಕರ ಸಂಘದ ಅಧ್ಯಕ್ಷ ನಾಗರಾಜು, ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಸಾರಿಗೆ ನೌಕರರ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.