ಗುಬ್ಬಿ: ಲೋಕಸಭಾ ಚುನಾವಣೆಯ ಟಿಕೆಟ್ ಘೋಷಣೆಯ ಬಳಿಕ, ಶುಕ್ರವಾರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಗೋಸಲ ಚೆನ್ನಬಸವೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಸೋಮಣ್ಣ ಅವರನ್ನು ಸಂಸದ ಜಿ.ಎಸ್. ಬಸವರಾಜ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ‘ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಭೇಟಿ ಮಾಡಿ ಅವರನ್ನು ಜೊತೆಯಲ್ಲಿಟ್ಟುಕೊಂಡೇ ಚುನಾವಣಾ ಪ್ರಚಾರ ನಡೆಸಿ ಗೆಲುವಿನ ಗುರಿ ತಲುಪುತ್ತೇನೆ’ ಎಂದು ಹೇಳಿದರು.
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ರಾಜ್ಯಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಸಕ್ರಿಯವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವುದರಿಂದ ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲುವ ನಿರೀಕ್ಷೆ ಇದೆ ಎಂದರು.
‘ಈ ಚುನಾವಣೆಯನ್ನು ಪಕ್ಷವು ಪ್ರತಿಷ್ಠೆಯನ್ನಾಗಿ ಪರಿಗಣಿಸಿದ್ದು, ತುಮಕೂರಿನ ಮತದಾರರು ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಎನ್ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡುವರು ಎಂಬ ನಿರೀಕ್ಷೆ ಇದೆ. ನಾನು ನರೇಂದ್ರ ಮೋದಿ ಅವರಿಗಾಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆ.ಇದರಲ್ಲಿ ನನ್ನ ಯಾವುದೇ ವೈಯಕ್ತಿಕ ಹಿತಾಸಕ್ತಿಯೂ ಇಲ್ಲ ಎಂದು ಹೇಳಿದರು.
ಜೆಡಿಎಸ್ ಮುಖಂಡರಾದ ಜಿ.ಎನ್. ಬೆಟ್ಟಸ್ವಾಮಿ, ಹೊನ್ನಗಿರಿ ಗೌಡ, ಸಂಸದ ಜಿ.ಎಸ್. ಬಸವರಾಜ್, ಚುನಾವಣಾ ಉಸ್ತುವಾರಿ ಬೈರಣ್ಣ, ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್.ಟಿ. ಬೈರಪ್ಪ, ರೈತ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಮಣ್ಣ, ಮಂಡಲ ಅಧ್ಯಕ್ಷ ಬಿ.ಎಸ್. ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಯತೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಶೇಖರ್ ಬಾಬು, ಡಾ.ನವ್ಯ ಬಾಬು, ಭಾರತಿ ಹಿತೇಶ್, ಮುಖಂಡರಾದ ಎನ್.ಸಿ. ಪ್ರಕಾಶ್, ಸಾಗರನಹಳ್ಳಿ ವಿಜಯ್ ಕುಮಾರ್, ಅಣ್ಣಪ್ಪ ಸ್ವಾಮಿ, ಕೃಷ್ಣಮೂರ್ತಿ, ಶಿವಕುಮಾರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.