ತುಮಕೂರು: ಒಳಮೀಸಲಾತಿಗೆ ಸಂಬಂಧಿಸಿದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾದಿಗ ದಂಡೋರ ಸಮಿತಿಯಿಂದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮನೆ ಎದುರು ಸೋಮವಾರ ಧರಣಿ ನಡೆಸಲಾಯಿತು. ನಂತರ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಮಾದಿಗ ದಂಡೋರ ರಾಜ್ಯ ವಕ್ತಾರ ರಾಘವೇಂದ್ರಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಜೆ.ಸಿ.ರಾಜಣ್ಣ ನೇತೃತ್ವದಲ್ಲಿ ಸಮಾವೇಶಗೊಂಡ ದಂಡೋರದ ಪದಾಧಿಕಾರಿಗಳು ‘ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಶಾಸನ ಸಭೆಯಲ್ಲಿ ಒತ್ತಾಯಿಸಬೇಕು. ಈ ಕುರಿತು ಶಾಸಕರು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಬೇಕು’ ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಶಾಸಕರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ದಂಡೋರದ ಯೋಗಾನಂದ ಮಾಗೋಡು, ಜೆಸಿಬಿ ವೆಂಕಟೆಶ್, ಮಹದೇವು ಕೋಡಿಯಾಲ, ನಾಗರಾಜು, ಸತೀಶ್, ಗಂಗಣ್ಣ ಪಾಲ್ಗೊಂಡಿದ್ದರು.