ಮಧುಗಿರಿ: ಕೊರೊನಾ ಸೋಂಕು ತಡೆಗಟ್ಟಲು ತಾಲ್ಲೂಕ ಆಡಳಿತ ಸನ್ನದ್ಧವಾಗಿದೆ ಎಂದು ಉಪವಿಭಾಗಾಧಿಕಾರಿ ಕೆ.ನಂದಿನಿ ದೇವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಅವರು ಮಾತನಾಡಿದರು.
ಸೋಂಕಿನ ಕುರಿತ ಸುಳ್ಳು ವದಂತಿಗಳಿಗೆ ಜನರು ಕಿವಿ ಕೊಡಬಾರದು. ದಿನಸಿ, ಮೆಡಿಕಲ್, ತರಕಾರಿ ಹಾಗೂ ಹಣ್ಣು ಖರೀದಿಸಲು ವ್ಯವಸ್ಥೆ ಮಾಡಿಕೊಡಲಾಗಿದೆ ಎಂದರು.
ಬೇಡತ್ತೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿರುವ ಕೂಲಿ ಕಾರ್ಮಿಕರು ಎಲ್ಲರೂ ಆರೋಗ್ಯವಾಗಿದ್ದಾರೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಹಾಗೂ ಆಹಾರ ವಿತರಣೆ ನಡೆಯುತ್ತಿದೆ. ಈ ವಿಚಾರವಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.
ಡಿವೈಎಸ್ಪಿ ಎಂ.ಪ್ರವೀಣ್ ಮಾತನಾಡಿ, ಸೋಂಕು ತಡೆಗೆ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಲಾಕ್ಡೌನ್ ವೇಳೆ ಅನಗತ್ಯವಾಗಿ ಓಡಾಡುತ್ತಿದ್ದ 160 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ್ ಬಾಬು ಮಾತನಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇದ್ದರೆ ಕೊರೊನಾ ವೈರಸ್ ತಡೆಯಲು ಸಾದ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಈ ರೋಗ ಹರಡದಂತೆ ತಡೆಯಲು ಸಹಕಾರ ನೀಡಬೇಕು ಎಂದರು.
ತಾ.ಪಂ. ಇಓ ಡಿ.ದೊಡ್ಡಸಿದ್ದಯ್ಯ ಮಾತನಾಡಿ, ಗ್ರಾ.ಪಂ ವ್ಯಾಪ್ತಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಸಾರ್ವಜನಿಕರಲ್ಲಿಯೂ ಅರಿವು ಮೂಡಿಸಲಾಗುತ್ತಿದೆ. ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪಡೆಯಲು ಹಾಗೂ ಡೇರಿಗಳಿಗೆ ಹಾಲು ಹಾಕಲು ಬರುವವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ಪಿಎಸ್ಐ ಕಾಂತರಾಜು, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗಂಗಾಧರ್, ತಾ.ಪಂ.ಎಡಿಒ ಬಿ.ಎಸ್.ಲಕ್ಷ್ಮಣ್ ಇದ್ದರು.