ಮಧುಗಿರಿ: ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ನಡೆದ ಪಿಡಿಒಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೀರಿನ ಸಮಸ್ಯೆ ನಿವಾರಿಸಲು 22 ಕೊಳವೆಬಾವಿಯನ್ನು ಕೊರೆಯಿಸ ಲಾಗುತ್ತಿದೆ ಎಂದರು.
ರೈತರ 55 ಖಾಸಗಿ ಕೊಳವೆಬಾವಿಗಳಿಂದ ಹಾಗೂ ಟ್ಯಾಂಕರ್ ಮೂಲಕ ನೀರು ಹರಿಸಲಾಗುತ್ತಿದೆ. ಮತ್ತಷ್ಟು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಯಿಂದ ಸರಬರಾಜು ಮಾಡಿ ಎಂದು ಪಿಡಿಒಗಳಿಗೆ ಸೂಚಿಸಿದರು.
2018- 19ನೇ ಸಾಲಿನ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್ ಮೂಲಕ ಸರಬರಾಜು ಮಾಡಿರುವ ₹7.50 ಲಕ್ಷ ಬಿಡುಗಡೆ ಗೊಳಿಸುವಂತೆ ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ಅವರಿಗೆ ಸೂಚಿಸಿದಾಗ, ಪಿಡಿಒಗಳು ತಡವಾಗಿ ಬಿಲ್ ಪಾವತಿ ಮಾಡಿರುವುದರಿಂದ ಈ ಸಮಸ್ಯೆ ಆಗಿದೆ ಎಂದರು.
ಆಗ ವೀರಭದ್ರಯ್ಯ ಜಿಲ್ಲಾಧಿಕಾರಿಗೆ ಕರೆ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ತಿಳಿಸಿದರು.
ರೈತರ ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕರ್ ನೀರನ್ನು ಸರಬರಾಜು ಮಾಡಿರುವ ಬಿಲ್ಗಳನ್ನು ತಿಂಗಳಿ ಗೊಮ್ಮೆ ಮೇಲಧಿಕಾರಿಗಳಿಗೆ ಸಲ್ಲಿಸು ವಂತೆ ಪಿಡಿಒಗಳಿಗೆ ಸೂಚಿಸಿದರು.
ತಾಲ್ಲೂಕಿನ ಬಹುತೇಕ ಹಳ್ಳಿಗಳ ಶುದ್ಧ ನೀರಿನ ಘಟಕಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ಸದ್ಯಕ್ಕೆ ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು, ಇದನ್ನು ಪಂಚಾಯಿತಿ ಯವರಿಗೆ ವಹಿಸಿ ಸೂಕ್ತ ನಿರ್ವಹಣೆ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.
ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಇಒ ದೊಡ್ಡ ಸಿದ್ದಯ್ಯ, ಕೃಷ್ಣ ಮೂರ್ತಿ, ಎಡಿಎ ಲಕ್ಷ್ಮಣ್ ಹಾಗೂ ಪಿಡಿಒಗಳು ಹಾಜರಿದ್ದರು.