ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ | ವಸತಿ ಶಾಲೆ ಸ್ಥಿತಿಗತಿ: ಮಳೆಗೆ ಜಲಾವೃತವಾಗುವ ವಸತಿನಿಲಯ

ಕಟ್ಟಡದ ಗೋಡೆ, ಚಾವಣಿಯಿಂದ ಉದುರುತ್ತಿದೆ ಸಿಮೆಂಟ್‌
Published 9 ಜನವರಿ 2024, 7:09 IST
Last Updated 9 ಜನವರಿ 2024, 7:09 IST
ಅಕ್ಷರ ಗಾತ್ರ

ಮಧುಗಿರಿ: ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ 2 ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿರುವುದರಿಂದ ಸೌಕರ್ಯಗಳಿಗಾಗಿ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ಇದೆ.

2000ದಲ್ಲಿ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನೆಯಾದಾಗ ವಿದ್ಯಾರ್ಥಿಗಳು ತುಂಬಿ ತುಳುಕುತ್ತಿದ್ದರು. ಆದರೆ ವರ್ಷ ಕಳೆದಂತೆ ಮಳೆ ಬಂದಾಗ ಕೊಠಡಿಯ ಚಾವಣಿಯಿಂದ ನೀರು ಜಿನುಗುತ್ತಿದೆ. ಭೂಮಿಯಿಂದ ಕೆಳ ಭಾಗದಲ್ಲಿ ಕಟ್ಟಡ ಇರುವುದರಿಂದ ಹಾಸ್ಟೆಲ್‌ನ ಕೊಠಡಿಯ ಶೌಚಾಲಯ, ಊಟದ ಕೊಠಡಿಗಳು ಮಳೆಯಿಂದ ಜಲಾವೃತಗೊಂಡು ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಮಸ್ಯೆಯ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗೆ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.

ಬಡ ವಿದ್ಯಾರ್ಥಿಗಳು ಅಂದರೆ ಎಲ್ಲರಿಗೂ ನಿರ್ಲಕ್ಷ್ಯ. ಕಳೆದ ಐದಾರು ವರ್ಷಗಳಿಂದ ಈ ಸಮಸ್ಯೆಯನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದರೂ ಯಾರೂ ಕೂಡ ಒಮ್ಮೆಯೂ ಭೇಟಿ ನೀಡಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. ಈ ಸಮಸ್ಯೆಯಿಂದಾಗಿ ವಿದ್ಯಾರ್ಥಿ ನಿಲಯಕ್ಕೆ ದಾಖಲಾತಿಯ ಸಂಖ್ಯೆ ಕೂಡ ಕಡಿಮೆಯಾಗುತ್ತಿದೆ.

ಕಟ್ಟಡದ ಗೋಡೆ ಮತ್ತು ಚಾವಣಿಯಿಂದ ಮಣ್ಣು ಉದುರುತ್ತಿದೆ. ಬಣ್ಣ ಕಾಣದೇ ಗೋಡೆಗಳು ಬಿರುಕುಗೊಳ್ಳುತ್ತಿವೆ. ಶೌಚಾಲಯಗಳ ಸ್ಥಿತಿಯಂತೂ ಹೇಳತೀರದಾಗಿದೆ. ವಿದ್ಯಾರ್ಥಿಗಳು ಶೌಚಾಲಯಕ್ಕೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿಗಳು ಶೌಚಕ್ಕಾಗಿ ಬಯಲಿನತ್ತ ತೆರಳುವ ಸ್ಥಿತಿ ಇದೆ.

ತಾಲ್ಲೂಕಿನ ಕೊಡಿಗೇನಹಳ್ಳಿ, ಐ.ಡಿ.ಹಳ್ಳಿ, ಪುರವರ ಹಾಗೂ ಮಿಡಿಗೇಶಿ ಹೋಬಳಿಯಲ್ಲಿ ಬಡ ವರ್ಗ ಹಾಗೂ ಹಿಂದುಳಿದ ವರ್ಗದ ಜನರೇ ಹೆಚ್ಚಾಗಿದ್ದು, ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡಲೆಂದು ಪಟ್ಟಣದ ಕಾಲೇಜುಗಳಿಗೆ ದಾಖಲಾತಿ ಮಾಡಿಸಿದ್ದಾರೆ. ಆದರೆ ಪಟ್ಟಣದ ಹೃದಯಭಾಗದಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿಗಳ ವಸತಿ ನಿಲಯ ಹೆಸರಿಗೇ ಅಷ್ಟೇ ಇದ್ದಂತಿದೆ. ಈ ನಿಲಯದಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. 86 ವಿದ್ಯಾರ್ಥಿಗಳು ಇಲ್ಲಿ ಇದ್ದಾರೆ.

ಈ ವಿದ್ಯಾರ್ಥಿ ನಿಲಯ ಪಟ್ಟಣದ ಹೃದಯ ಭಾಗದಲ್ಲಿ ಇರುವುದರಿಂದ ಎಲ್ಲ ಕಾಲೇಜುಗಳಿಗೆ ಹತ್ತಿರವಾಗುತ್ತಿದೆ. ಆದರೆ ಮೂಲ ಸೌಕರ್ಯಗಳ ಕೊರತೆಯಿಂದ ಈ ನಿಲಯದಲ್ಲಿ ಉಳಿಯಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ.

ವಿದ್ಯಾರ್ಥಿ ನಿಲಯದ ಮುಂಭಾಗವೇ ದೊಡ್ಡ ಚರಂಡಿ ಹಾದು ಹೋಗಿದೆ. ಮಳೆಗಾಲದಲ್ಲಿ ಕೊಳಚೆ ನೀರು ಮತ್ತು ಮಳೆಯ ನೀರು ನಿಲಯದ ಒಳಗೆ ನುಗ್ಗುವುದರಿಂದ ತೊಂದರೆಯಾಗುತ್ತದೆ. ಬೇರೆ ಸಮಯದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳು ವಿವಿಧ ರೋಗಗಳಿಂದ ಬಳಲುವ ಸ್ಥಿತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ 15, ಪರಿಶಿಷ್ಟ ವರ್ಗಗಳ ಇಲಾಖೆ 3, ಹಿಂದುಳಿದ ವರ್ಗಗಳ ಇಲಾಖೆ 7, ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ 3 ವಿದ್ಯಾರ್ಥಿ ನಿಲಯಗಳಿವೆ. 2016– 17ರಲ್ಲಿ ವಿದ್ಯಾರ್ಥಿಗಳಿಗೆ ಹಾಸಿಗೆ ನೀಡಲಾಗಿತ್ತು. 6 ವರ್ಷಗಳು ಕಳೆದರೂ ಕೂಡ ವಿದ್ಯಾರ್ಥಿಗಳಿಗೆ ನೂತನ ಹಾಸಿಗೆ ನೀಡಿಲ್ಲ. ಹರಿದು ಹೋಗಿರುವ ಹಾಸಿಗೆಯಲ್ಲಿ ಮಲಗುವಂತಾಗಿದೆ.

ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ 2ರ ಕಟ್ಟಡದ ಶೌಚಾಲಯ ಹಾಳಾಗಿರುವುದು
ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ 2ರ ಕಟ್ಟಡದ ಶೌಚಾಲಯ ಹಾಳಾಗಿರುವುದು

ತಾಲ್ಲೂಕಿನಲ್ಲಿ 8 ಮೊರಾರ್ಜಿ ವಸತಿ ಶಾಲೆಗಳಲ್ಲಿ ಎರಡು ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 64 ಕಾಯಂ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಆದರೆ 26 ಕಾಯಂ ಶಿಕ್ಷಕರ ಕೊರತೆ ಎದುರಾಗಿದೆ. ಆದರೂ ಆ ಜಾಗಕ್ಕೆ 26 ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ.

ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ ಯಲ್ಕೂರು ಗ್ರಾಮದ ಇಂದಿರಾ ವಸತಿ ಶಾಲೆಗೆ 1.25 ಕಿ.ಮೀಟರ್ ಸಂಪರ್ಕ ರಸ್ತೆ ಅಭಿವೃದ್ಧಿಯಾದರೆ ಮಳೆಗಾಲದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇಲ್ಲವಾದರೆ ಮಳೆಗಾಲದಲ್ಲಿ ನೀರು ವಸತಿ ಶಾಲೆ ಸಂಪೂರ್ಣವಾಗಿ ಜಲಾವೃತಗೊಂಡು ಎಲ್ಲರಿಗೂ ಸಾಕಷ್ಟು ತೊಂದರೆಯಾಗುತ್ತದೆ. ವಸತಿ ಶಾಲೆಗೆ ಸಂಪರ್ಕ ರಸ್ತೆಯನ್ನು ಮಾಡಲು ಕ್ರಮ ಕೈಗೊಳ್ಳಬೇಕೆಂದು ವಸತಿ ಶಾಲೆಯ ಪ್ರಾಂಶುಪಾಲ ಧನಂಜಯ್ ಮನವಿ ಮಾಡಿದ್ದಾರೆ.

ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ 2ರ ಕಟ್ಟಡದ ಮೇಲ್ಛಾವಣಿ ಶಿಥಿಲಗೊಂಡಿರುವುದು
ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ 2ರ ಕಟ್ಟಡದ ಮೇಲ್ಛಾವಣಿ ಶಿಥಿಲಗೊಂಡಿರುವುದು
ಡಿ.ಎನ್.ಲಿಂಗಮೂರ್ತಿ
ಡಿ.ಎನ್.ಲಿಂಗಮೂರ್ತಿ
ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ 2ರ ಕಟ್ಟಡ ಸಂಪೂರ್ಣ ಹಾಳಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಳೆ ಬಂದರೆ ಮಲಗುವುದಕ್ಕೂ ಕಷ್ಟವಾಗುತ್ತದೆ
ಡಿ.ಎನ್.ಲಿಂಗಮೂರ್ತಿ ಪದವಿ ವಿದ್ಯಾರ್ಥಿ
ಕೆ.ಜಿ.ನವೀನ್ ಕುಮಾರ್
ಕೆ.ಜಿ.ನವೀನ್ ಕುಮಾರ್
ವಿದ್ಯಾರ್ಥಿ ನಿಲಯದಲ್ಲಿ ಶೌಚಾಲಯ ಹಾಳಾಗಿ ತೊಂದರೆಯಾಗುತ್ತಿದೆ. ಮಳೆ ಬಂದರೆ ವಿದ್ಯಾರ್ಥಿ ನಿಲಯ ಸಂಪೂರ್ಣ ಜಲಾವೃತಗೊಳ್ಳುತ್ತದೆ. ನೂತನ ಕಟ್ಟಡ ನಿರ್ಮಾಣ ಮಾಡಬೇಕು
-ಭೀಮೇಶ್ ಪದವಿ ವಿದ್ಯಾರ್ಥಿ
ಭೀಮೇಶ್
ಭೀಮೇಶ್
ಕಟ್ಟಡದ ಮೇಲ್ಭಾಗದಲ್ಲಿ ಗೋಡೆಯ ಕಬ್ಬಿಣ ಹೊರ ಬಂದು ಮಣ್ಣು ಉದರುತ್ತಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ನಿಲಯಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು
- ಕೆ.ಜಿ.ನವೀನ್ ಕುಮಾರ್ ಪದವಿ ವಿದ್ಯಾರ್ಥಿ
ಕೆ.ಎನ್.ರಾಜಣ್ಣ
ಕೆ.ಎನ್.ರಾಜಣ್ಣ
ತಕ್ಷಣ ದುರಸ್ತಿಗೆ ಕ್ರಮ
ತಾಲ್ಲೂಕಿನಲ್ಲಿ ಯಾವುದೇ ಕಟ್ಟಡ ಶಿಥಿಲಗೊಂಡಿದ್ದರೆ ಅದನ್ನು ತಕ್ಷಣ ದುರಸ್ತಿ ಮಾಡಿಸಲಾಗುವುದು. ನೂತನ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುವುದು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲು ಬದ್ದನಾಗಿದ್ದೇನೆ. ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಊಟದ ಪಟ್ಟಿಯಂತೆ ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಿಂಡಿ ಮತ್ತು ಊಟ ನೀಡಬೇಕು. ಇದರಲ್ಲಿ ಯಾವುದೇ ವ್ಯತ್ಯಾಸವಾಗದಂತೆ ವಾರ್ಡನ್ ಹಾಗೂ ಅಧಿಕಾರಿಗಳು ನೋಡಿಕೊಳ್ಳಬೇಕು. ಕೆ.ಎನ್.ರಾಜಣ್ಣ ಸಹಾಕರ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT