ತುಮಕೂರು: ಕ್ಷಯ ರೋಗದ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಿ, ರೋಗದಿಂದ ಬಳಲುತ್ತಿರುವವರಿಗೆ ಉತ್ತಮ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸನತ್ಕುಮಾರ್ ತಿಳಿಸಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕ್ಷಯ ರೋಗದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ಷಯ ರೋಗ ಸಾಂಕ್ರಾಮಿಕ ರೋಗವಾಗಿದ್ದು, ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ಬೇರೆಯವರಿಗೆ ಹರಡುವ ಸಾಧ್ಯತೆ ಇರುತ್ತದೆ. ಯಾವುದೇ ಕಾರಣಕ್ಕೂ ರೋಗದ ಬಗ್ಗೆ ನಿರ್ಲಕ್ಷ್ಯಿಸದೇ ಶೀಘ್ರ ಪತ್ತೆ ಮಾಡಿ ಚಿಕಿತ್ಸೆಯನ್ನು ಪಡೆದುಕೊಂಡು ರೋಗದಿಂದ ಮುಕ್ತರಾಗಬೇಕು ಎಂದು ಸಲಹೆ ನೀಡಿದರು.
ದೇಶದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದ್ದು, ರೋಗ ನಿರ್ಮೂಲನೆಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ರೋಗಿಗಳಲ್ಲಿ ತಾರತಮ್ಯ ತೋರದೆ ಕೈ ಜೋಡಿಸಿ ಕೆಲಸ ಮಾಡುವುದು ಅವಶಕ್ಯವಾಗಿದೆ ಎಂದು ತಿಳಿಸಿದರು.
ದಿನಾಚರಣೆ ಅಂಗವಾಗಿ ಬಸ್ನಿಲ್ದಾಣ, ರೈಲ್ವೆ ಸ್ಟೇಷನ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕರಪತ್ರ ಮೂಲಕ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕ್ಷಯ ರೋಗದ ಸಿಬ್ಬಂದಿ ಇದ್ದರು.