ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಮಸ್ಕಲ್ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಶಂಕು ಸ್ಥಾಪನೆಯನ್ನು ಮಾಡಿದರು.
ನಂತರ ಮಾತನಾಡಿದ ಅವರು, ಸರ್ಕಾರದ ಅನುಮತಿ ಇಲ್ಲದಿದ್ದರೂ ಸಹ ಕಳೆದ ಶೈಕ್ಷಣಿಕ ಸಾಲಿನಿಂದ ಈ ಶಾಲೆಯಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗಿತ್ತು ಎಂದು ಹೇಳಿದರು.
ಯಾರೋ ಒಬ್ಬರು ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಸರ್ಕಾರದ ನಿಯಮ ಗಾಳಿಗೆ ತೂರಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಹ ನಿಯಮಾವಳಿ ಮೀರಿ ಅನುಮತಿ ನೀಡಿರುವುದು ಗೋಚರವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಶಾಸಕರು ಕಳೆದ ಶೈಕ್ಷಣಿಕ ವರ್ಷದಿಂದ ಆರಂಭವಾಗಿರುವ ಆಂಗ್ಲಶಾಲಾ ಶಿಕ್ಷಕರ ವೇತನ ಸಮಸ್ಯೆ ಪರಿಹಾರಕ್ಕೆ ₹ 4 ಲಕ್ಷ, ಕ್ರೀಡಾ ಪರಿಕರಗಳಿಗೆ ₹ 50 ಸಾವಿರ ನೀಡಿದರು. ನಂತರ ಹೊನ್ನುಡಿಕೆಯ ಉರ್ದುಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಶಾಲಾ ವಾರ್ಷಿಕೋತ್ಸವಕ್ಕೆ ₹ 25 ಸಾವಿರ, ₹ 35 ಲಕ್ಷದ ರಂಗಮಂದಿರ ಕಟ್ಟಡ ನಿರ್ಮಾಣಕ್ಕೆಶಂಕು ಸ್ಥಾಪನೆ ನೇರವೇರಿಸಿದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಲನೂರು ಅನಂತಕುಮಾರ್, ಗೂಳೂರು ಹೋಬಳಿ ಜೆಡಿಎಸ್ ಅಧ್ಯಕ್ಷ ಪಾಲನೇತ್ರಯ್ಯ, ಮಸ್ಕಲ್ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರೂಪ ಮೋಹನ್, ಮಸ್ಕಲ್ ತಾ.ಪಂ ಸದಸ್ಯ ಗೋವಿಂದರಾಜು, ಮಾಜಿ ಎಪಿಎಂಸಿ ಅಧ್ಯಕ್ಷ ವಿಜಯ್ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ ಇದ್ದರು.