ಕೋರ: ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಸ್ತಂಭ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಕರೀಕೆರೆ ಗ್ರಾಮದ ವಿದ್ಯಾರ್ಥಿ ಚಂದನ್ ಮನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂಗಳವಾರಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಚಂದನ್ ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚಿನ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಘಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಗ್ರಾಮಸ್ಥರು ಬೆಸ್ಕಾಂ ಇಲಾಖೆ ಬೇಜವಾಬ್ದಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್, ಘಟನೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಸ್ಕಾಂ ವ್ಯವಸ್ಥಾಪಕರು, ವಿದ್ಯುತ್ ಖಾತೆ ಸಚಿವರಿಗೆ ಪತ್ರ ಬರೆಯಲಾಗಿದೆ. ಶಾಲೆ ಸಮೀಪ ಹಾದು ಹೋಗಿರುವ ವಿದ್ಯುತ್ ತಂತಿ ತೆರವಿಗೆ ಅಥವಾ ಕೇಬಲ್ ಅಳವಡಿಕೆಗೆ ಮನವಿ ಮಾಡಲಾಗಿದೆ ಎಂದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗಣಿತ ಹಾಗೂ ಇಂಗ್ಲಿಷ್ ಶಿಕ್ಷಕರ ಕೊರತೆಯಿದೆ. ಸಿಎನ್ಆರ್ ಕಾನೂನು ಬದಲಾಯಿಸಿ ಎಂಜಿನಿಯರಿಂಗ್ ಮಾಡಿದ ವಿದ್ಯಾರ್ಥಿಗಳು ಡಿಎಡ್ ಮಾಡುವ ಹೊಸ ಕಾನೂನು ರೂಪಿಸಲಾಗುತ್ತಿದೆ ಎಂದರು.
ಶ್ರೀದೇವಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯುತ್ ಸ್ಪರ್ಶದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳಾದ ಪವನ್ ಹಾಗೂ ಶಶಾಂಕ್ ಅವರ ಆರೋಗ್ಯ ವಿಚಾರಿಸಿದರು. ಮಾರ್ಗಮಧ್ಯೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅರಕೆರೆ ರಮೇಶ್ ಮನೆಗೆ ಭೇಟಿ ನೀಡಿದರು.