ಬೆಂಗಳೂರು: ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ, ಅಲ್ಪಸಂಖ್ಯಾತ ಸಂಘಟನೆಗಳ ಕಾರ್ಯಕರ್ತರು ನಗರದ ವಿವಿಧೆಡೆ ಶುಕ್ರವಾರ ಮೌನ ಪ್ರತಿಭಟನೆ ನಡೆಸಿದರು.
ಶಿವಾಜಿನಗರ, ಎಸ್.ಜೆ ಪಾರ್ಕ್, ಗೋರಿಪಾಳ್ಯ, ಕಾಡುಗೊಂಡನ ಹಳ್ಳಿ, ಡಿ.ಜೆ.ಹಳ್ಳಿ, ಮೈಸೂರು ರಸ್ತೆಯ ಬಾಪೂಜಿ ನಗರ, ಯಶವಂತಪುರ, ಇಸ್ಲಾಂಪುರ ಸೇರಿದಂತೆ ಇತರೆಡೆಗಳಲ್ಲಿ ಅಲ್ಪಸಂಖ್ಯಾತ ಸಂಘಟನೆಗಳ ಕಾರ್ಯಕರ್ತರು ಮಸೀದಿಗಳಲ್ಲಿ ಪ್ರಾರ್ಥನೆ ಮುಗಿದ ಬಳಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬರೆದಿರುವ ಫಲಕಗಳನ್ನು ಕಾರ್ಯಕರ್ತರು ಪ್ರದರ್ಶಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು.
‘ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ, ಪ್ರಾರ್ಥನೆ ಮುಗಿದ ಬಳಿಕ ಮೌನ ಪ್ರತಿಭಟನೆಗೆ ಕೆಲವು ಸಂಘಟನೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಅನುಮತಿ ನೀಡಲಾಗಿತ್ತು. ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆದಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಉಂಟಾಗಿಲ್ಲ’ ಎಂದು ಪೂರ್ವ ವಲಯದ ಪೊಲೀಸ್ ಅಧಿಕಾರಿಯೊಬ್ಬರು’ ತಿಳಿಸಿದ್ದಾರೆ.