ತುರುವೇಕೆರೆ: ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ನೂತನ ಕಂದಾಯ ಗ್ರಾಮಗಳನ್ನು ವರ್ಗೀಕರಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ನೀಡುತ್ತಿದೆ ಎಂದು ಶಾಸಕ ಮಸಾಲ ಜಯರಾಮ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಸೋಮವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಅಲೆಮಾರಿ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು.
ಹಲವು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಅಲೆಮಾರಿ ಜನರು ಗ್ರಾಮಗಳನ್ನಾಗಿ ಮಾಡಿಕೊಂಡು ಅಲ್ಲಿ ವಾಸದ ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಅವರ ಹೆಸರಿನಲ್ಲಿ ನಿವೇಶನದ ಯಾವುದೇ ದಾಖಲಾತಿ ಇರಲಿಲ್ಲ. ಇದನ್ನು ಅರಿತು ನಮ್ಮ ಸರ್ಕಾರ ಕಂದಾಯ ಕಾಯ್ದೆ 94ರ ಅಡಿ ಲಕ್ಷಾಂತರ ಬಡವರು, ದೀನ ದಲಿತರಿಗೆ ಹಕ್ಕುಪತ್ರ ನೀಡುತ್ತಿದೆ ಎಂದು ತಿಳಿಸಿದರು.
ತಾಲ್ಲೂಕಿನ ತೂಬಿನಕಟ್ಟೆ, ನಾಗೇಗೌಡನಪಾಳ್ಯ, ಲಕ್ಕಿರಾಮನಪಾಳ್ಯ, ಚಾಕುವಳ್ಳಿಪಾಳ್ಯ, ಲಕ್ಕಸಂದ್ರ ಗ್ರಾಮದ 319 ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಸುಮಾರು ಫಲಾನುಭವಿಗಳು ಸರ್ಕಾರಕ್ಕೆ ಹಣ ತುಂಬದೆ ಹಕ್ಕುಪತ್ರ ನೀಡಲಾಗಿಲ್ಲ. ಆದ್ದರಿಂದ ಕೂಡಲೇ ಚಲನ್ ನೀಡಿ ಹಕ್ಕುಪತ್ರ ಪಡೆಯಬೇಕು ಎಂದು ಸಲಹೆ ನೀಡಿದರು.
ಕೆಲವು ಫಲಾನುಭವಿಗಳು ಮನೆ ನಿರ್ಮಿಸಿಕೊಂಡಿಲ್ಲ. ಅಂತಹ ಫಲಾನುಭವಿಗಳಿಗೆ ವಸತಿ ಯೋಜನೆಯಡಿ ಮನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ಇ.ಒ ಸತೀಶ್ ಕುಮಾರ್, ಸರ್ವೆ ಇಲಾಖೆಯ ಶಿವಶಂಕರ್, ಪಿ. ಕಾಂತರಾಜು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಫಲಾನುಭವಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.