ಗುರುವಾರ , ಮಾರ್ಚ್ 23, 2023
20 °C

ಕನ್ನಡ ರಾಜ್ಯೋತ್ಸವಕ್ಕೆ ಆಹ್ವಾನವಿಲ್ಲ: ವಿವಿಧ ಕನ್ನಡಪರ ಸಂಘಟನೆಗಳ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲಾ ಆಡಳಿತದ ವತಿಯಿಂದ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕನ್ನಡಪರ ಸಂಘಟನೆಗಳನ್ನು ಆಹ್ವಾನಿಸದೆ ಕಡೆಗಣಿಸುವ ಮೂಲಕ ಹೋರಾಟಗಾರರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಭಾನುವಾರ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯ ನಂತರ ಮಾತನಾಡಿದ ಮುಖಂಡರು, ‘ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಹೋರಾಟ ನಡೆಸುತ್ತಾ ಬಂದಿರುವ ಸಂಘಟನೆಗಳನ್ನು ಸೌಜನ್ಯಕ್ಕೂ ನಾಡ ಹಬ್ಬ ಆಚರಣೆಗೆ ಆಹ್ವಾನಿಸದೆ ಕಡೆಗಣಿಸಲಾಗಿದೆ’ ಎಂದು ದೂರಿದರು. ಜಿಲ್ಲಾ ಆಡಳಿತದ ಧೋರಣೆಯನ್ನು ಖಂಡಿಸಿದರು.

ಕನ್ನಡ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಧನಿಯಕುಮಾರ್, ‘ಈ ಹಿಂದಿನ ಜಿಲ್ಲಾಧಿಕಾರಿಗಳು ಕನ್ನಡಪರ ಸಂಘಟನೆಗಳನ್ನು ಪ್ರತಿ ನಾಡ ಹಬ್ಬದ ಸಂದರ್ಭದಲ್ಲೂ ಆಹ್ವಾನಿಸಿ, ನಮ್ಮ ಅಹವಾಲುಗಳನ್ನು ಮನ್ನಿಸುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್ ನೆಪದಲ್ಲಿ ಕನ್ನಡಪರ ಸಂಘಟನೆಗಳನ್ನು ಮರೆತಿದ್ದಾರೆ. ಜತೆಗೆ ರಾಜ್ಯೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.

ಕನ್ನಡ ಸಂಘಟನೆಯ ಅರುಣ್‍ ಕುಮಾರ್, ‘ಜಿಲ್ಲಾ ಆಡಳಿತಕ್ಕೆ ಒಂದು ವಾರದ ಮೊದಲೇ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳನ್ನು ಪರಿಗಣಿಸುವಂತೆ ಮನವಿ ಮಾಡಲಾಗಿತ್ತು. ಆದರೂ ನಿರ್ಲಕ್ಷ್ಯಿಸಲಾಗಿದೆ. ನಗರದ ವಿವಿಧ ವೃತ್ತಗಳಲ್ಲಿ ನಾಡ ಹಬ್ಬ ಆಚರಣೆಗೆ ಅನುಮತಿ ನೀಡಿ, ನಂತರ ಪೊಲೀಸರ ಮೂಲಕ ಇನ್ನಿಲ್ಲದ ನಿಯಮಗಳನ್ನು ಜಾರಿಗೆ ತಂದು ಆಚರಣೆಗೆ ಅಡ್ಡಿಯುಂಟು ಮಾಡಲಾಗುತ್ತದೆ’ ಎಂದರು.

ಕನ್ನಡಪರ ಸಂಘಟನೆಗಳ ಮುಖಂಡರಾದ ಉಮೇಶ್, ಸೋಮಶೇಖರ್, ಟಿ.ಇ.ರಘುರಾಮ್, ಆನಂದ್, ಕನ್ನಡ ಪ್ರಕಾಶ್, ಮುಬಾರಕ್ ಪಾಷ, ಪ್ರದೀಪ್‍ಕುಮಾರ್, ರಕ್ಷಿತ್, ರಾಕೇಶ್, ಕಿರಣ್, ಬಾಲು, ನಾಣಿ, ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

ದೂರವಾಣಿ ಮೂಲಕ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಮುಖಂಡರ ಜತೆಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು