ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡ ಜಂಗಮ: ಅಕ್ರಮ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಎಸ್ಸಿ,ಎಸ್ಟಿ ಸಮುದಾಯಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಎಚ್ಚರಿಕೆ
Last Updated 3 ಜೂನ್ 2019, 17:17 IST
ಅಕ್ಷರ ಗಾತ್ರ

ತುಮಕೂರು: ‘ಅಕ್ರಮವಾಗಿ ಬೇಡಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವ 178 ಮಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಅವರು ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.

ರದ್ದು ಮಾಡಿರುವ ಜಾತಿ ಪ್ರಮಾಣ ಪತ್ರ ಹೊಂದಿರುವರು. ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣಗಳ ಬಗ್ಗೆಯೂ ಸೂಕ್ತ ರೀತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಜಾಗೃತಿ ಉಸ್ತುವಾರಿ ಸಮಿತಿಯ ಸದಸ್ಯ ರಂಗಯ್ಯ ಮಾತನಾಡಿ, ‘ಬೇಡಜಂಗಮ ಜಾತಿ ಪ್ರಮಾಣ ಪತ್ರಗಳನ್ನು ರದ್ದುಪಡಿಸಿರುವುದಾಗಿ ತಹಶೀಲ್ದಾರ್‌ ಅವರು ಅನುಪಾಲನಾ ವರದಿ ನೀಡಿದ್ದಾರೆ. ಕೆಲವರು ಇದೇ ಜಾತಿ ಪ್ರಮಾಣ ಆಧಾರದ ಮೇಲೆ ಕೆ.ಐ.ಡಿ.ಬಿ.ಯಿಂದ ಪರಿಹಾರ ಪಡೆದಿದ್ದಾರೆ. ಅಲ್ಲದೇ ಇಬ್ಬರೂ ವ್ಯಕ್ತಿಗಳು ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ’ ಎಂದು ಸಭೆಗೆ ಮಾಹಿತಿ ನೀಡಿದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಎಂಬಿಬಿಎಸ್ ಹಾಗೂ ಬಿ.ಇ. ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಗೆ ₹ 64 ಲಕ್ಷ ಮೀಸಲಿರಿಸಿದೆ. ಆದರೆ, ₹ 64 ಲಕ್ಷ ಅನುದಾನದಲ್ಲಿ ತುಮಕೂರು ಮಹಾನಗರಪಾಲಿಕೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜೊತೆ ಇತರೆ ವರ್ಗದವರಿಗೂ ಇದೇ ಅನುದಾನ ಬಳಸಿದೆ. ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವ ಅನುದಾನವನ್ನು ಇತರೆ ವರ್ಗಕ್ಕೆ ಬಳಸಿಕೊಳ್ಳಲು ಅವಕಾಶವಿಲ್ಲ. ಈ ಬಗ್ಗೆ ಪಾಲಿಕೆಯ ಆಯುಕ್ತರು, ನಗರ ಯೋಜನಾ ನಿರ್ದೇಶಕರು, ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಂಡ ಈ ಬಗ್ಗೆ ಪರಿಶೀಲನೆ ನಡೆಸಬೇಕು. ಮುಂದಿನ 10 ದಿನಗಳೊಳಗೆ ನನಗೆ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ತಾಲ್ಲೂಕುವಾರು ಅಂಕಿ ಅಂಶಗಳನ್ನು ಪೊಲೀಸ್ ಇಲಾಖೆ ಮುಂದಿನ ಸಭೆಯಲ್ಲಿ ಒದಗಿಸಬೇಕು. ಪೊಲೀಸ್ ಠಾಣೆವಾರು ಶಾಂತಿಸಭೆ, ಕುಂದುಕೊರತೆ ಸಭೆ ನಡೆಸಿರುವ ಬಗ್ಗೆ ಮಾಹಿತಿಯನ್ನು ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಜಾಗೃತಿ ಉಸ್ತುವಾರಿ ಸಮಿತಿಯ ಸದಸ್ಯ ಕುಮಾರ್ ಮಾದರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಜಿ.ಬಿ.ದೇವರಾಜ್, ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿ ರಾಜ್‌ಕುಮಾರ್ ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT