ತುಮಕೂರು: ಅಂಗನವಾಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಆದೇಶಿಸಿದರು.
ಗುಬ್ಬಿ ತಾಲ್ಲೂಕಿನ ಇರಕಸಂದ್ರ ಮತ್ತು ಚೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಇರಕಸಂದ್ರ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕೇಂದ್ರದ ಕಾಮಗಾರಿಗಳನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ತಾಂತ್ರಿಕ ಸಹಾಯಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇರಕಸಂದ್ರ ಪಂಚಾಯಿತಿ ವ್ಯಾಪ್ತಿಯ ಅರಿವೇಸಂದ್ರ ಪಾಳ್ಯ ಗ್ರಾಮದಲ್ಲಿರುವ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಹಾಗೂ ಶಿಕ್ಷಕರರೊಂದಿಗೆ ಸಂವಾದ ನಡೆಸಿದರು.
ಇದಕ್ಕೂ ಮುನ್ನ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಪ್ರಗತಿ ಪರಿಶೀಲಿಸಿದರು.
ರೈತರು ಈ ಯೋಜನೆಗಳ ಪ್ರಯೋಜನ ಪಡೆಯಬೇಕು. ಅಧಿಕಾರಿಗಳು ಖುದ್ದಾಗಿ ರೈತರ ಮನೆ ಬಾಗಿಲಿಗೆ ಹೋಗಬೇಕು.ಅರ್ಜಿಗಳನ್ನು ಪಡೆದು ದಾಖಲೀಕರಿಸಬೇಕು ಎಂದು ಸೂಚಿಸಿದರು.
ಚೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆನ್ಲೈನ್ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅರ್ಜಿಗಳನ್ನು ಅಪ್ಲೋಡ್ ಮಾಡುವ ಹಾಗೂ ದಾಖಲೀಕರಿಸುವ ಸಮಸ್ಯೆಯಿರುವ ಬಗ್ಗೆ ಗುಬ್ಬಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರೊಂದಿಗೆ ಚರ್ಚಿಸಿ ತಕ್ಷಣ ಸಮಸ್ಯೆ ಬಗೆಹರಿಸಲು ಸೂಚಿಸಿದರು.