ತುಮಕೂರು: ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ವಿ.ವಿ ಕುಲಪತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹೆಚ್ಚಳ ಮಾಡಿರುವ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು. ವಿದ್ಯಾರ್ಥಿಗಳಿಗೆ ನೆರವಾಗುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಈ. ಶಿವಣ್ಣ, ‘ಪರೀಕ್ಷಾ ಶುಲ್ಕ, ದಾಖಲಾತಿ ಶುಲ್ಕಗಳು ಅವೈಜ್ಞಾನಿಕವಾಗಿದ್ದು ವಿ.ವಿ ವ್ಯಾಪ್ತಿಗೆ ಬರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಒಂದೊಂದು ಕಾಲೇಜಿನಲ್ಲಿ ಒಂದೊಂದು ರೀತಿಯಲ್ಲಿ ಶುಲ್ಕ ಪಾವತಿಸಿಕೊಳ್ಳಲಾಗುತ್ತಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕಿದ್ದಾರೆ. ಹೀಗಾಗಿ ಹೆಚ್ಚಿಸಿರುವ ಶುಲ್ಕವನ್ನು ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಪರೀಕ್ಷಾ ಶುಲ್ಕ ಪಾವತಿ ಮಾಡಲಾಗಿದೆ. ಕೆಲವು ಪದವಿ ಪರೀಕ್ಷೆಗಳು ನಡೆಯದಿದ್ದರೂ ಶುಲ್ಕ ಕಟ್ಟಿಸಿಕೊಳ್ಳಲಾಗಿದೆ. ಶುಲ್ಕ ಹಿಂದಿರುಗಿಸುವುದಾಗಿ ಹೇಳಿಯೂ ವಾಪಸ್ ನೀಡಿಲ್ಲ. ಮತ್ತೆ ಒಂದೇ ವರ್ಷದಲ್ಲಿ ಮೂರು ಬಾರಿ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳಲಾಗಿದೆ ಎಂದರು.
ನಗರ ಘಟಕದ ಅಧ್ಯಕ್ಷ ಶಶಿವರ್ಧನ್, ‘ಸರ್ಕಾರಿ ಕಾಲೇಜುಗಳಲ್ಲಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಷ್ಟೊಂದು ಪ್ರಮಾಣದ ಪರೀಕ್ಷಾ ಶುಲ್ಕ ಪಾವತಿಸಲು ಕಷ್ಟಕರವಾಗುತ್ತಿದೆ’ ಎಂದರು.
ಮುಖಂಡ ಜಿ.ಕೆ. ನಾಗಣ್ಣ, ‘ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕ ವಿಸ್ತರಿಸಬೇಕು. ಶುಲ್ಕ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸಲು ವಿ.ವಿ ಮುಂದಾಗಬೇಕು’ ಎಂದು ಒತ್ತಾಯಿಸಿದರು.