ತುಮಕೂರು: ನಗರದಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಮಹಾನಗರ ಪಾಲಿಕೆ ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬ್ರಿಟಿಷರ ವಿರುದ್ಧ ಹೋರಾಡಿದ ಶಿವಾಜಿ ಮಹಾರಾಜರ ಬಗ್ಗೆ ಅಪಾರ ಗೌರವವಿದೆ. ಆದರೆ ರಾಜ್ಯದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಗಡಿ ಭಾಗಗಳಲ್ಲಿ ಮರಾಠಿಗರು ಶಿವಾಜಿ ಪ್ರತಿಮೆ ಸ್ಥಾಪಿಸಿ ಕರ್ನಾಟಕದ ವಿರೋಧಿಗಳಂತೆ ಬಿಂಬಿಸುತ್ತಿದ್ದಾರೆ. ನ. 1ರ ಕನ್ನಡ ರಾಜ್ಯೋತ್ಸವ ದಿನದಂದು ಮರಾಠಿಗರು ಕರಾಳ ದಿನಾಚರಣೆ ಮಾಡುತ್ತಾರೆ. ಭಾಷೆ, ಬಾಂಧವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರ ವಿರುದ್ಧ ಕನ್ನಡಿಗರು ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಹೀಗಿರುವಾಗ ನಗರದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸಬಾರದು ಎಂದು ಆಗ್ರಹಿಸಿದರು.
ಮೊದಲಿನಿಂದಲೂ ಜಿಲ್ಲೆಯಲ್ಲಿ ಪ್ರತಿಮೆಗಳ ಸ್ಥಾಪನೆ ಸಂಸ್ಕೃತಿ ಇಲ್ಲ. ಬಸವಣ್ಣ, ಅಂಬೇಡ್ಕರ್, ಬಾಬು ಜಗಜೀವನ್ ರಾಂ ಪ್ರತಿಮೆ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿದ್ದರೂ ಅದು ಸಾಕಾರಗೊಂಡಿಲ್ಲ ಎಂದು ನೆನಪಿಸಿದ್ದಾರೆ.
ವಿಜಯಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಪಿ.ಸುಧೀರ್, ಜಿಲ್ಲಾ ಗೌರವಾಧ್ಯಕ್ಷ ಬಿ.ಬಿ.ಮಹದೇವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ನಾಯಕ್, ಯುವ ಘಟಕದ ಅಧ್ಯಕ್ಷ ದೀಕ್ಷಿತ್, ಪದಾಧಿಕಾರಿಗಳಾದ ಸಂದೀಪ್, ಜಿಮ್ ನಾಗರಾಜ್, ಹರೀಶ್, ರುದ್ರೇಶ್, ಯಾಸ್ಮಿನ್ ತಾಜ್, ಮಂಜುಳ ಇತರರು ಭಾಗವಹಿಸಿದ್ದರು.