ತುಮಕೂರು: ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ 11 ಗುತ್ತಿಗೆದಾರರಿಗೆ ₹ 1.53 ಕೋಟಿ ದಂಡ ವಿಧಿಸಲಾಗಿದೆ.
‘ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಕಾಮಗಾರಿ ಚುರುಕುಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.
‘ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಆದೇಶಿಸಲಾಗಿತ್ತು. ಈ ಆದೇಶವನ್ನು ಉಲ್ಲಂಘಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಕಾಮಗಾರಿ ವಿಳಂಬ ಮತ್ತು ಸಾರ್ವಜನಿಕ ಹಿತದೃಷ್ಟಿಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ವಹಿಸದ ಗುತ್ತಿಗೆದಾರರಿಗೆ ಈ ಹಿಂದೆ ಭೂಬಾಲನ್ ₹ 65.9 ಲಕ್ಷ ದಂಡ ವಿಧಿಸಿದ್ದರು.
****
ಕಾಮಗಾರಿ;ಸಂಸ್ಥೆ;ದಂಡದ ಮೊತ್ತ (₹)
ಒಳರಸ್ತೆಗಳ ಅಭಿವೃದ್ಧಿ ಕಾಮಗಾರಿ;ಆರ್ಎಂಎನ್ ನಿರ್ಮಾಣ ಸಂಸ್ಥೆ;50,41,630
ಅಶೋಕ ರಸ್ತೆ ಅಭಿವೃದ್ಧಿ ಕಾಮಗಾರಿ;ಸಿದ್ಧಾರ್ಥ ಸಿವಿಲ್ ವರ್ಕ್ಸ್ ಸಂಸ್ಥೆ;26,97,720
ಅಮಾನಿಕೆರೆ ಕೆರೆ ಏರಿ ರಕ್ಷಣೆ ಮತ್ತು ಅಭಿವೃದ್ಧಿ;ಆರ್ಎಂಎನ್ ನಿರ್ಮಾಣ ಸಂಸ್ಥೆ;23,42,262
ಡಾ.ರಾಧಾಕೃಷ್ಣ ರಸ್ತೆ ಅಭಿವೃದ್ಧಿ; ಶ್ರೀನಿವಾಸ ನಿರ್ಮಾಣ ಸಂಸ್ಥೆ; 16,42,295
ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ; ಸುಧಾಕರ ಪೆರಿಟಾಲ;10,31,460