ಕೊರಟಗೆರೆ: ಗೃಹ ಸಚಿವ ಜಿ.ಪರಮೇಶ್ವರ ನೇತೃತ್ವದಲ್ಲಿ ಸೆ. 15ರಂದು ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ಜನಸಂಪರ್ಕ ಸಭೆಯನ್ನು ತಾಲ್ಲೂಕಿನ ತೋವಿನಕೆರೆಯಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಮುನಿಶಾಮಿರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೆ.7ರಿಂದ 9ರವರೆಗೆ ತೋವಿನಕೆರೆ ನಾಡಕಚೇರಿ ಮುಂಭಾಗದ ಸಂತೆ ಮೈದಾನದಲ್ಲಿ ಎಲ್ಲ ಇಲಾಖೆಗಳಿಗೆ ಸಂಬಂಧಿಸಿದಂತೆ ಕುಂದು ಕೊರತೆ ಹಾಗೂ ಸರ್ಕಾರದ ಸೌಲಭ್ಯಗಳ ಸಾರ್ವಜನಿಕ ಅರ್ಜಿ ಸ್ವೀಕರಿಸಲಾಗುವುದು ಎಂದರು.
ಜನಸಂಪರ್ಕ ಸಭೆ ಅಂಗವಾಗಿ ಈಗಾಗಲೇ ಎಲ್ಲ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳಿಗೆ ಶೀಘ್ರ ಕ್ರಮವಹಿಸಿ ಸೆ.15ರಂದು ಸಂಬಂಧಪಟ್ಟ ಫಲಾನುಭವಿಗಳಿಗೆ ಸ್ಥಳದಲ್ಲೇ ಸವಲತ್ತು ವಿತರಿಸಲು ಸೂಚಿಸಲಾಗಿದೆ ಎಂದರು.
ಸದ್ಯ ಚನ್ನರಾಯನದುರ್ಗ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾರ್ವಜನಿಕ ಅರ್ಜಿಗಳಿಗೆ ಆದ್ಯತೆ ನೀಡಲಾಗುತ್ತದೆ. ಉಳಿದ ಹೋಬಳಿ ಅರ್ಜಿಗಳು ಬಂದಲ್ಲಿ ಅವುಗಳನ್ನು ಸ್ವೀಕರಿಸಲಾಗುವುದು. ಪ್ರತಿ ಹೋಬಳಿ ಹಂತದಲ್ಲೂ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕ ಕುಂದುಕೊರತೆ ಹಾಗೂ ಸಮಸ್ಯೆಗಳ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಉಪವಿಭಾಗಾಧಿಕಾರಿ ರಿಷಿ ಆನಂದ್ ಭಾಗವಹಿಸಲಿದ್ದಾರೆ ಎಂದರು.