ತುರುವೇಕೆರೆ: ಕಾಂಗ್ರೆಸ್ ಶ್ರಮಿಕ ಹಾಗೂ ಅಸಂಘಟಿತ ವಲಯದ ಪರವಾಗಿದೆ ಎಂದು ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾ.ನ. ಗುರುದತ್ ಹೇಳಿದರು.
ಪಟ್ಟಣದಲ್ಲಿ ಕಾರ್ಮಿಕರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಕನಿಷ್ಠ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.
ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಜನಹಿತ ಕಾಯುವ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. 25ಕ್ಕೂ ಹೆಚ್ಚು ಗ್ಯಾರಂಟಿಗಳ ಅನುಷ್ಠಾನ ಮಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದರು.
ಬಿಜೆಪಿಯ 10 ವರ್ಷದ ಆಡಳಿತದಲ್ಲಿ ಬಡವರ ಬದುಕು ಬೀದಿಗೆ ಬಿದ್ದಿದೆ. ಮಧ್ಯಮ ವರ್ಗದವರು ಬದುಕಲೂ ಆಗದಂತಾಗಿದೆ ಎಂದು ಆರೋಪಿಸಿದರು.
ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ದಂಡಿನಶಿವರ ಕುಮಾರ್ ಮಾತನಾಡಿ, ಬಿಜೆಪಿ ದಲಿತರನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಬಗರ್ ಹುಕುಂ ಸಮಿತಿ ಸದಸ್ಯ ಟಿ.ಎಚ್.ಗುರುದತ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಮುನಿಯೂರು ಗಿರೀಶ್, ಸಿ.ಎಸ್. ಪುರ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಮಂಜಯ್ಯ, ಡಿ.ಆರ್.ಹುಚ್ಚಪ್ಪ, ಒಬ್ಬೇನಾಗಸಂದ್ರದ ಕಾಂತರಾಜ್ ಉಪಸ್ಥಿತರಿದ್ದರು.