ತುಮಕೂರು: ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಿದರೆ ಆತ್ಮಹತ್ಯೆಯಂತಹ ಸಾಮಾಜಿಕ ಸಮಸ್ಯೆಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ ಹೇಳಿದರು.
ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರದಿಂದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ಇಲ್ಲಿನ ಸಾಂತ್ವನ ಕೇಂದ್ರದಲ್ಲಿ ಆಯೋಜಿಸಿದ್ದ ಚಿಂತನಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಧುನಿಕತೆಯ ಈ ಯುಗದಲ್ಲಿ ಎಲ್ಲರೂ ಹಣದ ಹಿಂದೆ ಹೋಗುತ್ತಿದ್ದಾರೆ. ಕುಟುಂಬ ಪ್ರೀತಿ ಮರೆಯುತ್ತಿದ್ದಾರೆ. ಇದರ ಪರಿಣಾಮ ಕುಟುಂಬಗಳಲ್ಲಿ ಪ್ರೀತಿಯೇ ಕಣ್ಮರೆ ಆಗುತ್ತಿದೆ. ಆತ್ಮಹತ್ಯೆ ಪ್ರಕರಣಗಳಿಗೂ ಪ್ರೇರಣೆ ಆಗುತ್ತಿದೆ ಎಂದು ವಿಷಾದಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಲಾಕ್ಡೌನ್ ಸಂದರ್ಭದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆದಿವೆ. ಆದರೆ ಬಹಿರಂಗವಾಗಿಲ್ಲ. ಮನೆಯಲ್ಲಿಯೇ ಕೆಲಸ ಮಾಡುತ್ತಿರುವ ಉದ್ಯೋಗಿಗಳೂ ಬೇರೆ ಬೇರೆ ರೀತಿಯ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂದರು.
ಲೇಖಕಿ ಸಿ.ಎಲ್.ಸುನಂದಮ್ಮ, ವಿದ್ಯಾರ್ಥಿಗಳ ಕೈಗೆ ಈಗ ಮೊಬೈಲ್ಗಳು ಸುಲಭವಾಗಿ ಸಿಗುತ್ತಿವೆ. ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗಿ ಅನಾರೋಗ್ಯಕರ ಆಟಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದರು.
ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ, ನಿರ್ಭಯ ಮಹಿಳಾ ವೇದಿಕೆ ಮುಖ್ಯಸ್ಥೆ ಗೀತಾ ನಾಗೇಶ್, ಸಿ.ಲಲಿತಾಮಲ್ಲಪ್ಪ, ಪಾರ್ವತಮ್ಮ, ಗಂಗಲಕ್ಷ್ಮಿ, ಅಂಬುಜಾಕ್ಷಿ, ಸವಿತಾ ಇದ್ದರು.