ಮಧುಗಿರಿ: ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ಹೆಚ್ಚಿಸದ ಬಿಜೆಪಿ ನೇತೃತ್ವದ ಸರ್ಕಾರದ ನಡೆ ಖಂಡಿಸಿ ತಾಲ್ಲೂಕು ನಾಯಕ ಸಂಘದ ಪದಾಧಿಕಾರಿಗಳು ಮಂಗಳವಾರ ನಡೆದ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಯಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಪರಿಶಿಷ್ಟ ಪಂಗಡದ ಮುಖಂಡರು, ಸರ್ಕಾರದ ಧೋರಣೆ ಖಂಡಿಸಿದರು. ಸಭೆ ಬಹಿಷ್ಕರಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪುರಸಭೆ ಅಧ್ಯಕ್ಷ ತಿಮ್ಮರಾಜು ಮಾತನಾಡಿ, ತಾಲ್ಲೂಕು ಆಡಳಿತದಿಂದ ಆಯೋಜಿಸಿರುವ ಸಭೆಯನ್ನು ಸಮುದಾಯದವರು ಸೇರಿದಂತೆ ಎಲ್ಲರೂ ಸೇರಿ ಬಹಿಷ್ಕರಿಸಿದ್ದೇವೆ. ರಾಜನಹಳ್ಳಿ ಸ್ವಾಮೀಜಿ ಅವರು ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವು 250ನೇ ದಿನಕ್ಕೆ ಸಮೀಪಿಸುತ್ತಿದೆ. ಆದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ವಾಲ್ಮೀಕಿ ಜಯಂತಿ ದಿನದಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.