ತುಮಕೂರು: ನಗರದ ಬಾಳನಕಟ್ಟೆ, ಮಂಡಿಪೇಟೆ, ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಮುಂದೆ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವುದನ್ನು ವಿರೋಧಿಸಿ ಬೀದಿಬದಿ ವ್ಯಾಪಾರಿಗಳು ಪಾಲಿಕೆ ಮುಂಭಾಗ ಮಂಗಳವಾರ ಪ್ರತಿಭಟಿಸಿದರು. ವ್ಯಾಪಾರಕ್ಕೆ ಪರ್ಯಾಯ ಜಾಗ ನೀಡುವಂತೆ ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಮಾತನಾಡಿ, 20 ವರ್ಷಗಳಿಂದಲೂ ವ್ಯಾಪಾರಿಗಳು ಇಲ್ಲಿ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಸ್ಮಾರ್ಟ್ಸಿಟಿ ಅಧಿಕಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳು ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿರುವುದರಿಂದ ಅವರು ಜೀವನ ನಡೆಸುವುದು ಕಷ್ಟವಾಗಿದೆ. ಪಾಲಿಕೆ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಪಾಲಿಕೆ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಮುಂಚೆ, ಪರ್ಯಾಯ ಜಾಗ ಗುರುತಿಸಿ ನೀಡುವುದಾಗಿ ವ್ಯಾಪಾರಿಗಳಿಗೆ ಭರವಸೆ ನೀಡಿತ್ತು. ಆದರೆ ರಾತ್ರೋರಾತ್ರಿ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಅಮಾನವೀಯವಾಗಿ ನಡೆದುಕೊಂಡಿದೆ ಎಂದು ದೂರಿದರು.
ಪಾಲಿಕೆ ಹಾಗೂ ಸ್ಮಾರ್ಟ್ಸಿಟಿ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗ ಗುರುತಿಸಿ ನೀಡುವ ಮೂಲಕ ಅವರ ಜೀವನ ನಿರ್ವಹಣೆಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭರತ್, ಪಾರ್ವತಮ್ಮ, ಗೋಪಾಲ್, ರಹೀಮ್, ಅಫ್ರೋಜ್, ಶ್ವೇತಾ, ಶ್ರೀಧರ್ ನಾಯ್ಕ್, ಪಾಂಡುರಂಗ, ಸಿದ್ದರಾಜು, ಮದ್ದರಂಗಯ್ಯ, ಗಂಗಯ್ಯ, ಲಲಿತ, ನವೀನ್ಕುಮಾರ್, ಜಬೀವುಲ್ಲಾ, ಸೈಯದ್ಪಾಷ, ವಿಷ್ಣು ಇದ್ದರು.