ತುಮಕೂರು: ಕಾರ್ಮಿಕರ ದುಡಿಯುವ ವೇಳೆಯನ್ನು 8ರಿಂದ 12 ಗಂಟೆಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ಬಿಎಸ್ಎನ್ಎಲ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೂರಾರು ಸಂಖ್ಯೆಯ ಕಾರ್ಮಿಕರು ಪ್ರತಿಭಟನಾ ರ್ಯಾಲಿಯಲ್ಲಿ ಹೆಜ್ಜೆ ಹಾಕಿದರು.
ಬಂಡವಾಳಗಾರರ ಲಾಭಕ್ಕಾಗಿ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲಾಗುತ್ತಿದೆ. ಸಂವಿಧಾನದ ಪ್ರಕಾರ ಕಾರ್ಮಿಕರಿಗೆ ಸಿಗಬೇಕಾದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಸರ್ಕಾರ ದುಡಿಯುವ ವರ್ಗದ ಪರವಾಗಿ ಕೆಲಸ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗಿರೀಶ್, ‘ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶ ಸೃಷ್ಟಿಸಬೇಕು. ಕಾರ್ಮಿಕರಿಗೆ ವಾರಕ್ಕೆ 5 ದಿನ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ ಕೆಲಸದ ಅವಧಿ ನಿಗದಿಪಡಿಸಿ ಕಾಯ್ದೆಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಎ.ಲೋಕೇಶ್, ಎಐಟಿಯುಸಿ ಕಂಬೇಗೌಡ, ಮಂಜುಳಾ ಗೋನಾವರ ಇತರರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.