ಗುಬ್ಬಿ: ಬಸ್ಗಳ ಕೊರತೆಯಿಂದಾಗಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲೆ- ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿಯಿಂದ ಮಂಗಳವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.
ಎಬಿವಿಪಿ ವಿಭಾಗೀಯ ಸಂಚಾಲಕ ಅಪ್ಪುಪಾಟೀಲ್ ಮಾತನಾಡಿ, ಕೋವಿಡ್ ಲಾಕ್ಡೌನ್ ತೆರವಿನ ನಂತರ ಶಾಲೆ-ಕಾಲೇಜು ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ, ಸಾರಿಗೆ ಇಲಾಖೆಯವರು ತಾಲ್ಲೂಕಿನ ಗ್ರಾಮಾಂತರ ಭಾಗಗಳಿಗೆ ಸಂಚಾರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸಿಲ್ಲ ಎಂದರು.
ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿದೆ.ಅದಕ್ಕೆ ಅಗತ್ಯವಾದಷ್ಟು ಬಸ್ಗಳ ವ್ಯವಸ್ಥೆ ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ತಾಲ್ಲೂಕು ಘಟಕದ ಕಾರ್ಯದರ್ಶಿ ಗುಹೇಶ್ ಮಾತನಾಡಿ, ಕೋವಿಡ್ ಲಾಕ್ಡೌನ್ಗಿಂತ ಮೊದಲು ವ್ಯವಸ್ಥಿತವಾಗಿದ್ದ ಬಸ್ ಸಂಚಾರ ಈಗ ಅಸ್ತವ್ಯಸ್ಥವಾಗಿದೆ. ಸಾರಿಗೆ ಅಧಿಕಾರಿಗಳು ಅಗತ್ಯವಿರುವ ಕಡೆ ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆಗೊಳಿಸಲು ಕ್ರಮಕೈಗೊಳ್ಳಬೇಕು ಎಂದರು.
ವಿದ್ಯಾರ್ಥಿನಿ ಯುಕ್ತಿ ಮಾತನಾಡಿ, ಬಸ್ ಕೊರತೆಯಿಂದಾಗಿ ತರಗತಿಗಳಿಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದರು.
ಮನವಿ ಸ್ವೀಕರಿಸಿ ಮಾತನಾಡಿದ ಸಾರಿಗೆ ನಿಯಂತ್ರಣಾಧಿಕಾರಿ ಕೆಂಪರಾಜಪ್ಪ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್ ಅಗತ್ಯವಿದೆ ಎನ್ನುವುದನ್ನು ವಿದ್ಯಾರ್ಥಿಗಳು ತಿಳಿಸಿದರೆ, ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕ್ರಮಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದರು.
ಎಬಿವಿಪಿ ಸದಸ್ಯ ಜೀವನ್, ಮಲ್ಲಿಕಾರ್ಜುನ ಸ್ವಾಮಿ, ಬೈರೇಶ್, ಮಹದೇವಪ್ರಸಾದ್, ಕಂಚಿಯಸ್ವಾಮಿ, ಪವಿತ್ರ, ಸಂಗೀತ, ಬೃಂದ, ಲಿಖಿತ, ಹಾಗೂ ವಿದ್ಯಾರ್ಥಿಗಳು ಇದ್ದರು.