ತುಮಕೂರು: ಉಪನ್ಯಾಸಕರ ಬೇಡಿಕೆಗಳನ್ನು ರಾಜ್ಯದ ಸಮ್ಮಿಶ್ರ ಸರ್ಕಾರ ಈಡೇರಿಸಲಿದೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಭರವಸೆ ನೀಡಿದರು.
ನಗರದ ಕನ್ನಡ ಭವನದಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯ ಸಂಘ ಆಯೋಜಿಸಿದ್ದ 2018–19 ನೇ ಸಾಲಿನ ಶೈಕ್ಷಣಿಕ ಕಾರ್ಯಕ್ರಮ, ನಿವೃತ್ತರಿಗೆ ಸನ್ಮಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ವಿದ್ಯಾರ್ಥಿಗಳ ಭವಿಷ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹೆಚ್ಚು ಮಹತ್ವದ್ದಾಗಿದೆ. ನಾನು ಅಧ್ಯಕ್ಷನಾದ ನಂತರ ಪ್ರಾಚಾರ್ಯ ಸಂಘ ಮರುಹುಟ್ಟು ಪಡೆದಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಆರ್.ಚೌಡರೆಡ್ಡಿ ತೂಪಲ್ಲಿ ಮಾತನಾಡಿ, ’ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯವನ್ನು ಕಟ್ಟಿಕೊಡಲು ಶ್ರಮಿಸಿ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ಮಾಡಬೇಕು’ ಎಂದು ಹೇಳಿದರು.
ಆದಾಯ ತೆರಿಗೆ ಸಹಾಯಕ ಆಯಕ್ತೆ ಎಸ್.ಭುವನೇಶ್ವರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಜಿಲ್ಲೆಯ ಉಪನಿರ್ದೇಶಕಿ ಎಸ್.ನಾಗರತ್ನ, ಜಿಲ್ಲಾ ಘಟಕದ ಅಧ್ಯಕ್ಷ ಶಂಕರ್, ಸಂಘಟನಾ ಕಾರ್ಯದರ್ಶಿ ಸಂಘದ ಎಂ.ಎಸ್.ಚಿದಾನಂದ ಇದ್ದರು.