ತುಮಕೂರು: ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ಅಖಿಲ ಭಾರತ ಕಾರ್ಮಿಕ ಒಕ್ಕೂಟ ಕಾಂಗ್ರೆಸ್ (ಎಐಟಿಯುಸಿ) ರಾಜ್ಯ ಘಟಕದ ಕಾರ್ಯದರ್ಶಿ ಎನ್.ಶಿವಣ್ಣ ಆಗ್ರಹಿಸಿದರು.
ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಫೆಡರೇಷನ್ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಬಿಸಿಯೂಟ ನೌಕರರ ತಾಲ್ಲೂಕು ಸಮ್ಮೇಳನದಲ್ಲಿ ಮಾತನಾಡಿದರು.
ಮುಂಬರುವ ಅಧಿವೇಶನ ಆರಂಭಕ್ಕೆ ಮುನ್ನ ಅಕ್ಷರ ದಾಸೋಹ ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ. ಎಐಟಿಯುಸಿ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್, ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರ್ಕಾರಕ್ಕೆ ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ಸೂಚಿಸಿದೆ. ಅದೇ ರೀತಿ ರಾಜ್ಯದಲ್ಲೂ ಕನಿಷ್ಠ ವೇತನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ಅಧಿವೇಶನದ ಸಂದರ್ಭದಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗುವುದಾಗಿ ಎಚ್ಚರಿಸಿದರು.
ಬಿಸಿಯೂಟ ನೌಕರರ ಫೆಡರೇಷನ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅವರಗೆರೆ ಚಂದ್ರು, ತಾಲ್ಲೂಕು ಘಟಕದ ಅಧ್ಯಕ್ಷೆ ಉಮಾದೇವಿ, ಎಐಟಿಯುಸಿ ಮುಖಂಡರಾದ ಕಂಬೇಗೌಡ, ಕಾಂತರಾಜು ಮಾತನಾಡಿದರು. ಮುಖಂಡರಾದ ರಾಧಮ್ಮ, ಲಕ್ಷ್ಮಮ್ಮ, ಪುಷ್ಪಲತಾ, ಸಾವಿತ್ರಮ್ಮ ಉಪಸ್ಥಿತರಿದ್ದರು.