ತುಮಕೂರು: ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆ(ಎಸ್ಸಿಪಿ, ಟಿಎಸ್ಪಿ) ಯೋಜನೆಯಡಿ ಶೇ 100 ರಷ್ಟು ಪ್ರಗತಿ ಸಾಧಿಸದ ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರೇಮನಾಥ್ ಅವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಎಸ್ಸಿಪಿ, ಟಿಎಸ್ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ‘ಕೃಷಿ, ಮಧುಗಿರಿಯ ಪಂಚಾಯತ್ ರಾಜ್ ಇಲಾಖೆ, ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಗಳು 2019–20ನೇ ಸಾಲಿನಲ್ಲಿ ನಿಗದಿತ ಪ್ರಗತಿ ಸಾಧಿಸಿಲ್ಲ. ಕೂಡಲೇ ನಿಗದಿತ ಗುರಿ ಸಾಧಿಸಬೇಕು’ ಎಂದು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ, ‘ಲೋಕೋಪಯೋಗಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ, ಕೈಮಗ್ಗ ಮತ್ತು ಜವಳಿ ಇಲಾಖೆ, ಸಹಕಾರ ಇಲಾಖೆಗಳು ಪೂರ್ಣ ಪ್ರಮಾಣದ ಪ್ರಗತಿ ಸಾಧಿಸಿವೆ’ ಎಂದು ಹೇಳಿದರು.
ಕೋವಿಡ್-19 ಸೋಂಕು ರೋಗವಿದೆ ಎಂದು ಪ್ರಗತಿ ಸಾಧಿಸದೆ ಅಧಿಕಾರಿಗಳು ಸುಮ್ಮನೆ ಕೂರಬಾರದು. ಪ್ರಗತಿ ಕುಂಠಿತವಾಗದಂತೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ನಿರ್ದೇಶಿಸಿದರು.