ತುಮಕೂರು: ಕೋವಿಡ್–19 ಎರಡನೇ ಅಲೆ ಹೆಚ್ಚುತ್ತಿದ್ದು, ಪಡಿತರವನ್ನು ಒಂದೆಡೆ ವಿತರಿಸದೆ ಎರಡು–ಮೂರು ಕಡೆಗಳಲ್ಲಿ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಸೂಚಿಸಿದರು.
ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸುವ ಸಲುವಾಗಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿ, ಪಿಡಿಒಗಳು ಗ್ರಾಮೀಣ ಪ್ರದೇಶದಲ್ಲಿ ಸರಿಯಾಗಿ ಕೆಲಸ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಸೂಚನೆ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಗಂಗಾಧರಸ್ವಾಮಿ ಅವರಿಗೆ ನಿರ್ದೇಶನ ನೀಡಿದರು.
ಸಭೆ, ಸಮಾರಂಭ, ಜಾತ್ರೆ, ಉತ್ಸವಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಹೇಳಿದರು.
ನಿಷೇಧಾಜ್ಞೆ ಜಾರಿ: ಜಿಲ್ಲೆಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸಭೆ, ಸಮಾರಂಭ, ಜಾತ್ರೆ, ಆರ್ಕೆಸ್ಟ್ರಾ, ಮದುವೆ, ನಾಟಕಗಳಲ್ಲಿ ಹೆಚ್ಚಿನ ಜನ ಸೇರಬಾರದು ಎಂಬ ಕಾರಣಕ್ಕೆ ಜಾರಿ ಮಾಡಲಾಗಿದೆ ಎಂದು ಹೇಳಿದರು.