ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಸೋಹ ದಿನ: ಸಮರ್ಪಣೆಯೇ ದ್ಯೇಯ ಎಂದ ಸಿಎಂ ಬಸವರಾಜ ಬೊಮ್ಮಾಯಿ

Last Updated 21 ಜನವರಿ 2022, 6:11 IST
ಅಕ್ಷರ ಗಾತ್ರ

ತುಮಕೂರು: ದಾಸೋಹ ಭಾರತೀಯ ಪರಂಪರೆ. ಅನ್ನ, ಅಕ್ಷರ, ವಿದ್ಯೆ ಸೇರಿ ತ್ರಿವಿಧ ದಾಸೋಹದ ಮೂಲಕ ಸಿದ್ಧಗಂಗಾ ಮಠದಿಂದ ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಿದ್ಧಗಂಗಾ ಮಠದಲ್ಲಿ ದಾಸೋಹ ದಿನದ ಅಂಗವಾಗಿ ಮಕ್ಕಳಿಗೆ ಊಟ ಬಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಇಂದಿನ ಆಧುನಿಕ ಕಾಲದಲ್ಲೂ ದಾಸೋಹಕ್ಕೆ ಮಹತ್ವ ನೀಡುವ ಉದ್ದೇಶದಿಂದ ಇಂದು ರಾಜ್ಯದಾದ್ಯಂತ ದಾಸೋಹ ದಿನಾಚರಣೆ ಮಾಡಲಾಗುತ್ತಿದೆ. ನಮ್ಮನ್ನು ನಾವು ದಾಸೋಹ ಪರಂಪರೆಯಲ್ಲಿ ಸಮರ್ಪಣೆ ಮಾಡಿಕೊಳ್ಳುವ ದ್ಯೇಯ ಇದರಲ್ಲಿದೆ.ಸರ್ಕಾರದಿಂದ ಅನ್ನದಾಸೋಹ ಮಾಡುವ ಮಠಗಳಿಗೆ ಪಡಿತರ ವಿತರಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.

ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ ಯೋಜನೆಗೆ ₹150 ಕೋಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಆಶ್ರಯ ದಾಸೋಹ ನೀಡುವ ನಿಟ್ಟಿನಲ್ಲಿ ₹5,000 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಎಲ್ಲರಿಗೂ ಅನ್ನ, ಅಕ್ಷರ, ಸೂರು ಸಿಗಬೇಕು. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ದಾಸೋಹ ಕಾರ್ಯಕ್ರಮ ಮಾಡಲಾಗುತ್ತದೆ. ಶಿವಕುಮಾರ ಸ್ವಾಮೀಜಿ ದಾಸೋಹ ಕೆಲಸವನ್ನು ಸರ್ಕಾರದ ವತಿಯಿಂದ ಮಾಡಲು ವ್ಯವಸ್ಥಿತವಾಗಿ ಕಾರ್ಯಕ್ರಮ ರೂಪಿಸಲು ಸರ್ಕಾರ ಬದ್ಧವಾಗಿದೆ. ಶ್ರೀಗಳಿಗೆ ಭಾರತರತ್ನ ನೀಡುವ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಕೋವಿಡ್ ಹೆಚ್ಚಳವಾಗುತ್ತಿರುವುದರಿಂದ ವಾರಾಂತ್ಯ ಕರ್ಫ್ಯೂ ಮುಂದುವರೆಸುವ ಸಂಬಂಧ ಇಂದು ನಡೆಯಲಿರುವ ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಸಂಸದ ಬಿ.ಎಸ್. ಬಸವರಾಜು, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಸಿ.ಎಂ.ರಾಜೇಶ್ ಗೌಡ, ಮುಖಂಡರಾದ ಸೊಗಡು ಶಿವಣ್ಣ, ಸುರೇಶ್ ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT