ತುಮಕೂರು: ನೂತನ ಸಚಿವರಾದ ಕೆ.ಸಿ.ನಾರಾಯಣಗೌಡ ಹಾಗೂ ಕೆ.ಗೋಪಾಲಯ್ಯ ತಮ್ಮ ಪತ್ನಿಯರ ಜತೆ ಶುಕ್ರವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಕೆ.ಸಿ.ನಾರಾಯಣಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ‘ಇಲ್ಲಿಯವರೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆ ಮುಂಬರುವ ದಿನಗಳಲ್ಲಿ ಬಿಜೆಪಿ ಭದ್ರಕೋಟೆ ಆಗಲಿದೆ’ ಎಂದರು.
ಎಚ್.ಡಿ.ಕುಮಾರಸ್ವಾಮಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ. ಮಂಡ್ಯ ಜಿಲ್ಲೆ ಕಬ್ಬು ಬೆಳೆಗಾರರ ಜೀವನಾಡಿಯಾಗಿದ್ದ ಎರಡು ಸಕ್ಕರೆ ಕಾರ್ಖಾನೆ ಮುಚ್ಚಿ ನಾಲ್ಕೈದು ವರ್ಷಗಳಾದರೂ ಗಮನ ಕೊಡಲಿಲ್ಲ. ಇದೀಗ ಈ ಎರಡು ಕಾರ್ಖಾನೆಗಳನ್ನು ಪ್ರಾರಂಭಿಸಿ ರೈತರಿಗೆ ನ್ಯಾಯ ದೊರಕಿಸಿಕೊಡುತ್ತೇನೆ’ ಎಂದರು.
ಕೆ.ಗೋಪಾಲಯ್ಯ, ‘ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಮುಂದೆ ಅವರು ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಬಿಜೆಪಿ ಕಟ್ಟುವ ನಿಟ್ಟಿನಲ್ಲಿ ಮುನ್ನಡೆಯುತ್ತೇನೆ’ ಎಂದರು.