ತುರುವೇಕೆರೆ: ಪಟ್ಟಣದಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಸಿ.ಎಸ್.ಮೋಹನ್ಕುಮಾರ್ (16) ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ರೋಹಿತ್ ಅಸ್ವಸ್ಥಗೊಂಡಿದ್ದಾರೆ.
ಮೋಹನ್ಕುಮಾರ್ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರದ ನಿವಾಸಿ. ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ನ ಕಂಚಿರಾಯ ಸನಿವಾಸ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಿಕಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವೇಳೆ ಅಸ್ವಸ್ಥಗೊಂಡಿದ್ದರು.
ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದರು. ನಂತರ ವಿದ್ಯಾರ್ಥಿ ತೀವ್ರ ಅಸ್ವಸ್ಥಗೊಂಡಿದ್ದರಿಂದ ಅಲ್ಲಿನ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಆಂಬುಲೆನ್ಸ್ ಮುಖಾಂತರ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ವಿದ್ಯಾರ್ಥಿ ರೋಹಿತ್ ಹುಲ್ಲೇಕೆರೆಯ ಬಸವೇಶ್ವರ ಸಂಯುಕ್ತ ಪದವಿಪೂರ್ವ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದರು. ಪರೀಕ್ಷಾ ಸಮಯದಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣಕ್ಕೆ ದಂಡಿನಶಿವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಿಡಲಾಯಿತು.