ಚಿಕ್ಕನಾಯಕನಹಳ್ಳಿ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಗುರುಪ್ರಸಾದ್ ಮಾತನಾಡಿ, ರಾಜ್ಯಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿದೆ. 23 ದಿನಗಳಿಂದ ತರಗತಿ ಬಹಿಷ್ಕರಿಸಿ ಮುಷ್ಕರದಲ್ಲಿ ನಿರತರಾದ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಿಲ್ಲ. ತರಗತಿಗಳು ನಡೆಯದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಯುಜಿಸಿ ವೇತನ ಸೇರಿ ಅತಿಥಿ ಉಪನ್ಯಾಸಕರ ಎಲ್ಲ ಬೇಡಿಕೆ ಈಡೇರಿಸಿ ತರಗತಿಗಳು ಸುಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕಿ ಚಂದ್ರಿಕಾ ಮಾತನಾಡಿ, ‘15 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. 20 ವರ್ಷದ ಹಿಂದೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಲಾಗಿತ್ತು. ನಂತರ ಬಂದ ಸರ್ಕಾರಗಳು ಕಣ್ಣೊರೆಸುವ ಕೆಲಸ ಮಾಡುತ್ತಿವೆ. 23 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರ ಗಮನ ಹರಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕ ಹೊನ್ನಪ್ಪ ಮಾತನಾಡಿ, ‘13 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ನನಗಿಂತಲೂ ಹಿರಿಯರಿದ್ದಾರೆ. ನಮಗೆ ಗ್ರಾಚ್ಯುಟಿ, ನಿವೃತ್ತಿ ವೇತನದ ವ್ಯವಸ್ಥೆ ಇಲ್ಲ. ಉದ್ಯೋಗ ಭದ್ರತೆ ಇಲ್ಲ. ಚುನಾವಣೆ ವೇಳೆ ಕಾಯಂಗೆ ನಿಯಮಾವಳಿ ರೂಪಿಸುವುದಾಗಿ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ನಮಗೆ ಸೂಕ್ತ ನ್ಯಾಯ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ತಾಲ್ಲೂಕು ಸಂಚಾಲಕ ದೀಪಕ್, ಮಾದ್ಯಮ ಪ್ರಮುಖ ಸಿದ್ದೇಶ್, ವಿದ್ಯಾರ್ಥಿಗಳಾದ ಸಿದ್ದೇಶ್, ಶಾಂತಕುಮಾರ್, ವೆಂಕಟೇಶ್, ಮಧು, ಸಚಿನ್, ರಕ್ಷಿತಾ, ಕಾವ್ಯ ಪಾಲ್ಗೊಂಡಿದ್ದರು.